
ಮೈಸೂರು: ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್ಪಿ) ಎಡಿಜಿಪಿಯಾಗಿದ್ದ ಡಾ.ಪಿ. ರವೀಂದ್ರನಾಥ್ ಅವರ ವರ್ಗಾವಣೆಯನ್ನು ಕೈಬಿಡುವಂತೆ ಒತ್ತಾಯಿಸಿ ಮೈಸೂರು ಕೆಎಸ್ಆರ್ಪಿ ಸಿಬ್ಬಂದಿ ಗುರುವಾರ ಬೀದಿಗೆ ಇಳಿದರು.
ರವೀಂದ್ರನಾಥ್ ಅವರಿಗೆ ಬೆಂಬಲ ಸೂಚಿಸಿ ಮೈಸೂರಿನ 5ನೇ ಬೆಟಾಲಿಯನ್ ಕೆಎಸ್ಆರ್ಪಿ ಸಿಬ್ಬಂದಿ ಗುರುವಾರ ಸಂಜೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಹಾಗೂ ಅಧಿಕಾರಿ ವಿರುದ್ಧ ಆರೋಪ ಮಾಡಿದ ಮಹಿಳೆಯ ವಿರುದ್ಧ ಘೋಷಣೆ ಕೂಗಿದರು.
ವಾಹನ ದಟ್ಟಣೆ ಹೆಚ್ಚಾಗಿರುವ ಲಲಿತ ಮಹಲ್ ರಸ್ತೆಯ ಕುರುಬಾರಹಳ್ಳಿ ವೃತ್ತದ ಬಳಿ ದಿಡೀರ್ ನಡೆದ ಪ್ರತಿಭಟನೆಗೆ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಬಂದ ಕಮಾಂಡೆಂಟ್ ಎಸ್. ರಾಮದಾಸಗೌಡ ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದರು. ಬಳಿಕ ಕೆಎಸ್ಆರ್ಪಿ ಸಿಬ್ಬಂದಿ ಪ್ರತಿಭಟನೆ ಕೈಬಿಟ್ಟರು.
ಇದಕ್ಕೂ ಮುನ್ನ ನಗರದ ಗಾಂಧಿ ಚೌಕದ ಬಳಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮನ್ವಯ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಸೂಕ್ತ ತನಿಖೆಗೆ ಒತ್ತಾಯಿಸಿದರು. ರವೀಂದ್ರನಾಥ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದರು. ಅವರು ಕಾರ್ಯನಿರ್ವಹಿಸಿದ ಎಲ್ಲ ಸ್ಥಳಗಳಲ್ಲಿ ಕಳಂಕ ರಹಿತರಾಗಿದ್ದಾರೆ.
ಇನ್ನು ಮುಂದೆ ಉನ್ನತ ಹುದ್ದೆಗೆ ಏರುವ ಸಾಧ್ಯತೆ ಇದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಈ ಸಂಚು ರೂಪಿಸಲಾಗಿದೆ. ಈ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ವೇದಿಕೆಯ ಮುಖಂಡ ಹರಿಹರ ಆನಂದಸ್ವಾಮಿ, ದ್ಯಾವಪ್ಪನಾಯಕ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.