ಮೈಸೂರು: ರಾಜಕಾಲುವೆಗಳ ಒತ್ತುವರಿ ತೆರವು ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ನಿವಾಸದಲ್ಲಿ ಸಭೆ ಕರೆದಿದ್ದಾರೆ.
ನಗರದ ಕನಕಗಿರಿ ಬಡಾವಣೆಯಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಆಕ್ರೋಶಗೊಂಡಿದ್ದ ನಿವಾಸಿಗಳು, ಭಾನುವಾರ ಸಂಜೆ ಮುಖ್ಯಮಂತ್ರಿ ನಿವಾಸದ ಎದುರು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ರಾಜಕಾಲುವೆಗಳ ಒತ್ತುವರಿ ಆಗಿರುವ ಕಾರಣ, ಮಳೆ ನೀರು ಹರಿಯದೆ ಮನೆಗಳಿಗೆ ನುಗ್ಗುತ್ತಿದೆ ಎಂದು ಅಳಲು ತೋಡಿಕೊಂಡರು. ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ಸೋಮವಾರ ಜಿಲ್ಲಾಧಿಕಾರಿ ಡಿ.ರಂದೀಪ್ ಅವರ ಸಮಕ್ಷಮದಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಒತ್ತುವರಿ ಆಗಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡುವಂತೆ ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಚಿಕ್ಕಮಾದು ಭೇಟಿ: ಸಿಗ್ಮಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಚಿಕ್ಕಮಾದು ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಬಾಗಿಲ ಬಳಿ ಬಾಲಕನೊಬ್ಬ ಬಂದು ‘ಮತ್ತೆ ನೀವೇ ಮುಖ್ಯಮಂತ್ರಿ ಆಗುವಿರಿ’ ಎಂದ. ಆಗ ಸಿದ್ದರಾಮಯ್ಯ ಬಾಲಕನ ಬೆನ್ನು ತಟ್ಟಿ ಕಳುಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.