ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷವು ಮಾರ್ಚ್ 24ರಂದು ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಿದ್ದು, ಅಚ್ಚರಿಯ ವ್ಯಕ್ತಿಯೊಬ್ಬರು ಕಣಕ್ಕೆ ಇಳಿಯಲಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ತಿಳಿಸಿದರು.
ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಶುಕ್ರವಾರ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜೆಡಿಎಸ್ ಅಭ್ಯರ್ಥಿಯ ಕುರಿತು ಎದ್ದಿರುವ ಎಲ್ಲ ಊಹಾಪೋಹಗಳಿಗೆ ಇನ್ನೆರಡು ದಿನಗಳಲ್ಲಿ ತೆರೆ ಬೀಳಲಿದೆ. ಮೈಸೂರು ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮರ್ಥ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆದಿವೆ. ಇದು ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳ ವಿರುದ್ಧದ ಹೋರಾಟವೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸೇಡಿನ ರಾಜಕಾರಣವಲ್ಲ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆಯಾಗಿದೆ ಎಂಬುದಕ್ಕೆ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳೇ ಸಾಕ್ಷಿ. ಬಿಜೆಪಿಯ ಮಾಜಿ ಸಂಸದರೊಬ್ಬರಿಗೆ ಟಿಕೆಟ್ ಕೈತಪ್ಪಿರುವುದರ ಹಿಂದೆ ಈ ಹುನ್ನಾರಗಳಿರುವುದು ಸ್ಪಷ್ಟ. ದೇಶದಲ್ಲಿ ಬಿಜೆಪಿ ಮತಿಯ ಶಕ್ತಿ ತಲೆ ಎತ್ತಲು ಕಾಂಗ್ರೆಸ್ ಪಕ್ಷವೇ ಕಾರಣ. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕೆಟ್ಟ ಆಡಳಿತ ನೀಡಿದೆ. ಹೀಗಾಗಿ ಸೋಲುವ ಭೀತಿಯಿಂದ ಹಾಲಿ ಸಚಿವರೇ ಚುನಾವಣೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಕುಡಿಯುವ ನೀರಿನ ಯೋಜನೆಗೆ ಹಾಸನ ಜಿಲ್ಲೆಗೆ ಮೀಸಲಿಟ್ಟಿದ್ದ ₨ 29.11 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಇದು ಎಚ್.ಡಿ. ದೇವೇಗೌಡ ಅವರ ವಿರುದ್ಧದ ಸೇಡಿನ ರಾಜಕಾರಣವಲ್ಲವೇ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.