ADVERTISEMENT

₹ 50 ಸಾವಿರ ಕೋಟಿ ನಷ್ಟ; ಡಾ.ಟಿ.ಎನ್‌.ಪ್ರಕಾಶ್‌ ಕಮ್ಮರಡಿ

ಕೋವಿಡ್‌ನ ಕಾಲಘಟ್ಟದಿಂದ ಸಂಕಷ್ಟದ ಸುಳಿಗೆ ಸಿಲುಕಿರುವ ಕೃಷಿಕ ಸಮೂಹ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2021, 12:42 IST
Last Updated 13 ನವೆಂಬರ್ 2021, 12:42 IST

ಮೈಸೂರು: ‘2020ರ ಮಾರ್ಚ್‌ನಿಂದ 2021ರ ಮಾರ್ಚ್‌ ಅವಧಿಯಲ್ಲಿ ಶೇ 10ರಷ್ಟು ಕೃಷಿ ಉತ್ಪನ್ನ ಹೆಚ್ಚಳವಾಗಿದೆ. ಆದರೆ ಕೋವಿಡ್‌ನಿಂದಾಗಿ ಸಕಾಲಕ್ಕೆ ಕೊಯ್ಲು, ಮಾರಾಟ ಮಾಡಲಾಗದೆ ರಾಷ್ಟ್ರಮಟ್ಟದಲ್ಲಿ ಹಿಂಗಾರು ಹಂಗಾಮಿನಲ್ಲೇ ಅಂದಾಜು ₹ 50 ಸಾವಿರ ಕೋಟಿಯಷ್ಟು ಮೌಲ್ಯದ ಕೃಷಿ ಉತ್ಪನ್ನ ಹಾಳಾಗಿದೆ’ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಎನ್‌.ಪ್ರಕಾಶ್‌ ಕಮ್ಮರಡಿ ಶನಿವಾರ ಇಲ್ಲಿ ತಿಳಿಸಿದರು.

‘ಕೋವಿಡ್‌ನ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿದ ರಾಜ್ಯದ ರೈತರ ಸಮೀಕ್ಷೆ ನಡೆಸಲಾಗಿದೆ. ರಾಜ್ಯವನ್ನು ಐದು ವಿಭಾಗವನ್ನಾಗಿ ಮಾಡಿಕೊಂಡು ಮೊಬೈಲ್‌ ಮೂಲಕವೇ 5 ಸಾವಿರ ರೈತರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಎಲ್ಲವನ್ನೂ ಕ್ರೋಡೀಕರಿಸಿ 108 ಪುಟಗಳ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗಿದೆ. ಇದರಲ್ಲಿ ರೈತರ ಬವಣೆಯನ್ನು ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾಜ್ಯ ಸರ್ಕಾರ ಕೋವಿಡ್‌ ಪರಿಸ್ಥಿತಿಯನ್ನು ತೃಪ್ತಿಕರವಾಗಿ ನಿಭಾಯಿಸಿಲ್ಲ ಎಂದು ಶೇ 55ರಷ್ಟು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ–ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾಯ್ದೆಗಳ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಶೇ 30ಕ್ಕೂ ಹೆಚ್ಚು ಯುವ ರೈತರು ಕೃಷಿ ತೊರೆಯುವ ಮುನ್ಸೂಚನೆ ನೀಡಿದ್ದಾರೆ. ಬಹುತೇಕರಿಗೆ ಬದುಕಿನ ಅಭದ್ರತೆ ಕಾಡುತ್ತಿದೆ. ಈ ಎಲ್ಲ ಅಂಶಗಳು ವರದಿಯಲ್ಲಿ ಉಲ್ಲೇಖವಾಗಿವೆ’ ಎಂದು ತಿಳಿಸಿದರು.

ADVERTISEMENT

‘ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಸ್ವರೂಪ ನೀಡಬೇಕು. ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸಬಾರದು. ಸರ್ಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು’ ಎಂದು ಕಮ್ಮರಡಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.