ADVERTISEMENT

ಕುಡಿಯುವ ನೀರಿಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 7:29 IST
Last Updated 4 ಜನವರಿ 2018, 7:29 IST

ನಂಜನಗೂಡು: ತಾಲ್ಲೂಕಿನ ಕೂಡ್ಲಾಪುರ ಗ್ರಾಮ ಪಂಚಾಯಿತಿ ಮುಂಭಾಗ ಬುಧವಾರ ತರದಲೆ ಗ್ರಾಮದ ಮಹಿಳೆಯರು ಕುಡಿಯುವ ನೀರು ಒದಗಿಸುವಂತೆ ಒತ್ತಾಯಿಸಿ ಛಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.

ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅಭಿ ನಾಗಭೂಷಣ್, ನೂರು ಕುಟುಂಬ ವಾಸಿಸುವ ತರದಲೆ ಗ್ರಾಮದ ದಲಿತರ ಬೀದಿಗೆ ಒಂದು ತಿಂಗಳಿನಿಂದ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಇರುವ ಒಂದು ಬೋರ್ ವೆಲ್ ಕೆಟ್ಟು ನಿಂತಿದೆ. ದಲಿತರು ಕುಡಿಯುವ ನೀರಿಗಾಗಿ ಉಪ್ಪಾರ ಬೀದಿಯಲ್ಲಿರುವ ತೊಂಬೆ ಆಶ್ರಯಿಸಬೇಕಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು.

15 ದಿನಗಳ ಒಳಗೆ ನೀರು ಒದಗಿಸದಿದ್ದರೆ, ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಪಿಡಿಒ ಪ್ರಮೀಳಾ ಮನವಿ ಸ್ವೀಕರಿಸಿ ಮಾತನಾಡಿ, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು. ಗ್ರಾಮದಲ್ಲಿ ಹಾದು ಹೋಗಿರುವ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಪೈಪ್‌ ಲೈನ್‌ನಿಂದ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಛಲವಾದಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತ್ ಕುಮಾರ್, ದಸಂಸ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್, ಮಲ್ಲಿಕಾರ್ಜುನ, ಗೌರಮ್ಮ, ಲಕ್ಷ್ಮಿ, ಹೊರಳವಾಡಿ ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.