ADVERTISEMENT

569 ಮಂದಿಗೆ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 9:53 IST
Last Updated 16 ಮಾರ್ಚ್ 2018, 9:53 IST

ನಂಜನಗೂಡು: ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆ ಸಲುವಾಗಿ ಆರೋಗ್ಯ ಇಲಾಖೆ ಆಯೋಜಿಸಿರುವ ಉಚಿತ ಆರೋಗ್ಯ ಶಿಬಿರದಲ್ಲಿ ಹೆಚ್ಚಿನ ಗ್ರಾಮೀಣ ಭಾಗದ ಜನರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಎಂ.ಲತಾ ಸಿದ್ದಶೆಟ್ಟಿ ಸಲಹೆ ನೀಡಿದರು.

ತಾಲ್ಲೂಕಿನ ಹೆಡತಲೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗುರುವಾರ ಆರೋಗ್ಯ ಇಲಾಖೆ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂತಹ ಶಿಬಿರ ಆಯೋಜಿಸಿ ಗ್ರಾಮೀಣ ಜನರಿಗೆ ನೆರವಾಗುವುದು ಸರ್ಕಾರದ ಉದ್ದೇಶ ಎಂದರು.

ADVERTISEMENT

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಲಾವತಿ ಮಾತನಾಡಿ, ತಪಾಸಣೆ ವೇಳೆ ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಇಲಾಖೆಯಿಂದ ನೆರವು ನೀಡಲಾಗುವುದು ಎಂದರು.

ಮೈಸೂರಿನ ಕೆ.ಆರ್.ಆಸ್ಪತ್ರೆ ತಜ್ಞ ವೈದ್ಯರು ತಪಾಸಣೆ ನಡೆಸಿದರು. 150 ಮಂದಿ ಮೂಳೆ, 120 ಮಂದಿ ಚರ್ಮ ಕಾಯಿಲೆ, 111 ಮಂದಿ ಕಣ್ಣಿನ ಸಮಸ್ಯೆ, 43 ಮಂದಿ ಮೂಗು ಮತ್ತು ಶ್ರವಣ ಸಮಸ್ಯೆ, 52 ಮಂದಿ ಮಹಿಳೆಯರು, 68 ಮಕ್ಕಳು ಸೇರಿದಂತೆ ಒಟ್ಟು 569 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಪೈಕಿ ವಿವಿಧ ಖಾಯಿಲೆಯಿಂದ ಬಳಲುತ್ತಿರುವ 25 ಮಂದಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯರು ಶಿಫಾರಸು ಮಾಡಿದರು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹೆಮ್ಮರಗಾಲ ಶಿವಣ್ಣ, ಸದಸ್ಯರಾದ ಬಿ.ಎಸ್.ರಾಮು, ಮಹದೇವ ನಾಯ್ಕ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.