ಮೈಸೂರು: ‘ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ತಿಳಿಸಿದರು.
‘6ನೇ ವೇತನ ಆಯೋಗದ ಶ್ರೇಣಿ ಜಾರಿಗೆ ಕೆಲವೊಂದು ತೊಡಕಿವೆ. ಈಗಾಗಲೇ ಸಮಸ್ಯೆ ಪರಿಹಾರಕ್ಕೆ ಅಂತಿಮ ರೂಪ ನೀಡಿದ್ದೇವೆ. ಏ.9ರಂದು ವಿಧಾನಸೌಧದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸಭೆ ನಡೆಯಲಿದೆ. ಅಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ನಂತರ ಮುಖ್ಯಮಂತ್ರಿ ಜೊತೆ ಚರ್ಚಿಸಿ ಅನುಷ್ಠಾನಗೊಳಿಸುತ್ತೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
‘ಅರ್ಚಕರು ಸಹ ಬೇಡಿಕೆ ಸಲ್ಲಿಸಿದ್ದಾರೆ. ಆರೋಗ್ಯ ವಿಮೆ, ಜೀವ ವಿಮೆ ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸುವೆ. ತಿಂಗಳೊಳಗೆ ನಿರ್ಧಾರ ಪ್ರಕಟಿಸಲಿದ್ದೇವೆ’ ಎಂದು ಸಚಿವರು ಹೇಳಿದರು.
‘ರಾಜ್ಯದ ವಿವಿಧೆಡೆ ಜಾತ್ರಾ ಮಹೋತ್ಸವ ನಡೆದಿವೆ. ಕೋವಿಡ್–19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇವೆ. ಸಂಪ್ರದಾಯ ಪಾಲನೆಗಷ್ಟೇ ಅವಕಾಶ ಕೊಡಲಾಗಿದೆ. ಕೋವಿಡ್ ಪ್ರಕರಣ ಹೆಚ್ಚಾದರೆ ಜನರು ಸೇರುವುದನ್ನು ನಿರ್ಬಂಧಿಸಲಾಗುವುದು. ಅನಿವಾರ್ಯವಾದರೆ ಭಕ್ತರು ದೇಗುಲ ಪ್ರವೇಶಿಸುವುದನ್ನು ನಿಷೇಧಿಸುವ ಚಿಂತನೆ ನಡೆದಿದೆ’ ಎಂದು ಶ್ರೀನಿವಾಸ ಪೂಜಾರಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಹಾಸ್ಟೆಲ್ ವಾಸ್ತವ್ಯ
‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2,400ಕ್ಕೂ ಹೆಚ್ಚು ಹಾಸ್ಟೆಲ್ಗಳು ಕಾರ್ಯಾಚರಿಸುತ್ತಿವೆ. ಕೋವಿಡ್–19 ಮಾರ್ಗಸೂಚಿ ಅನುಸರಿಸಲಾಗುತ್ತಿದೆ. ಹಾಸ್ಟೆಲ್ ಸುಧಾರಣೆ ನಿಟ್ಟಿನಲ್ಲಿ ಜಿಲ್ಲಾ ಹಂತದ ಅಧಿಕಾರಿಗಳು ವಾರಕ್ಕೊಂದು ದಿನ ಹಾಸ್ಟೆಲ್ನಲ್ಲಿ ವಾಸ್ತವ್ಯ ಮಾಡಬೇಕು. ರಾಜ್ಯ ಮಟ್ಟದ ಅಧಿಕಾರಿಗಳು 15 ದಿನಕ್ಕೊಮ್ಮೆ ಹಾಸ್ಟೆಲ್ನಲ್ಲಿ ವಾಸ್ತವ್ಯ ಹೂಡಬೇಕು ಎಂದು ಈಗಾಗಲೇ ಸೂಚಿಸಲಾಗಿದೆ’ ಎಂದು ಸಚಿವರು ಮಾಹಿತಿ ನೀಡಿದರು.
‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಹಿಡಿದರೆ, ತಮಿಳುನಾಡು, ಕೇರಳದ ಚುನಾವಣೆಯಲ್ಲಿ ಈ ಬಾರಿ ಗಮನಾರ್ಹ ಸಾಧನೆಗೈಯಲಿದೆ’ ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.