ಮೈಸೂರು: ‘ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶುಕ್ರವಾರ ಇಲ್ಲಿ ಆಗ್ರಹಿಸಿದರು.
ನಗರದ ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸೇವಾ ಸಂಸ್ಥೆ ಉದ್ಘಾಟಿಸಿ ಮಾತನಾಡಿದ ಅವರು, ‘ಸಮಾಜದಲ್ಲಿ ಸ್ಥಾನಮಾನ, ಅವಕಾಶ, ಪ್ರಾತಿನಿಧ್ಯ, ಪ್ರಾಬಲ್ಯ ಇರುವವರೇ ಮೀಸಲಾತಿ ಕೇಳುವಾಗ, ಮಡಿವಾಳರು ಕೇಳುವುದರಲ್ಲಿ ತಪ್ಪೇನಿದೆ?’ ಎಂದರು.
‘ಡಿ.ದೇವರಾಜ ಅರಸು ಕಾಲದಲ್ಲಿ ಸ್ವತಃ ಅವರೇ, ‘ಸಂಘ–ಸಂಸ್ಥೆಗಳನ್ನು ಮಾಡಿಕೊಂಡು ಮನವಿ ನೀಡಿ’ ಎಂದು ಸಣ್ಣ ಸಮುದಾಯದವರಿಗೆ ಹೇಳುತ್ತಿದ್ದರು. ಬಿಹಾರದಲ್ಲಿ ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಿ ಮೀಸಲಾತಿ ನೀಡಲಾಗಿದೆ. ಮೀಸಲಾತಿಯ ಸೌಲಭ್ಯಗಳಿಗಾಗಿ ನಮ್ಮ ನಡುವಿನ ಅಸಮಾಧಾನಗಳನ್ನು ಮರೆತು ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು’ ಎಂದು ವಿಶ್ವನಾಥ್ ಹೇಳಿದರು.
ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ಮಾಜಿ ಸಂಸದ ಆರ್.ಧ್ರುವನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಮುಖಂಡ ಆರ್.ರಘು, ಕೆಪಿಸಿಸಿ ಸದಸ್ಯ ಪಿ.ರಾಜು, ಎಚ್.ಸಿ.ಲಕ್ಷ್ಮಣ್ ಮತ್ತಿತರರು ಸಮಾರಂಭದಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.