ADVERTISEMENT

ಆದಿವಾಸಿಗಳಿಗೂ ದಸರಾ ದರ್ಶನ: ಸಚಿವ ವಿ.ಸೋಮಣ್ಣ

ಜಿಲ್ಲಾ ಉಸ್ತುವಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2019, 9:51 IST
Last Updated 8 ಸೆಪ್ಟೆಂಬರ್ 2019, 9:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಎಚ್‌.ಡಿ.ಕೋಟೆ (ಮೈಸೂರು): ‘ಆದಿವಾಸಿಗಳಿಗೂ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಈ ಬಾರಿ ಕಲ್ಪಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಇಲ್ಲಿ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮೀಣ ದಸರಾ ಮಹೋತ್ಸವ ಏರ್ಪಡಿಸುವ ಸಂಬಂಧ ಆಯೋಜಿಸಿದ್ದ ತಾಲ್ಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಎಚ್.ಡಿ.ಕೋಟೆ, ಹುಣಸೂರು, ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ನೆಲೆಸಿರುವ ಆದಿವಾಸಿ ಜನರನ್ನು ದಸರಾ ಉತ್ಸವದ ವೇಳೆ ಬಸ್‌ಗಳ ಮೂಲಕ ಮೈಸೂರಿಗೆ ಕರೆ ತಂದು ದಸರಾದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಾರಿ ನಮ್ಮ ಆದ್ಯತೆಯ ಕೆಲಸವಾಗಿದೆ. ಮೈಸೂರಿಗೆ ಬರುವ ಗಿರಿಜನರಿಗೆ ಊಟೋಪಚಾರದ ವ್ಯವಸ್ಥೆಯೊಂದಿಗೆ ಚಾಮುಂಡಿ ಬೆಟ್ಟ, ಅರಮನೆ, ಮೃಗಾಲಯ ನೋಡುವುದಕ್ಕೂ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದರು.

ADVERTISEMENT

ಶಾಸಕರಾದ ಸಿ.ಅನಿಲ್‌ಕುಮಾರ್‌, ನಿರಂಜನ್ ಕುಮಾರ್, ಮಾಜಿ ಶಾಸಕರಾದ ಸಿದ್ದರಾಜು, ಕೋಟೆ ಎಂ.ಶಿವಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ, ಉಪವಿಭಾಗಾಧಿಕಾರಿ ವೀಣಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ, ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಯೋಗೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.