ತಿ.ನರಸೀಪುರ: ತಾಳೆ ಬೆಳೆಗೂ ಬೆಂಬಲ ಬೆಲೆ ಘೋಷಿಸಿರುವ ಕಾರಣ ಅಡಿಕೆ ಬೆಳೆಗೆ ಸೀಮಿತವಾಗದೆ ತಾಳೆ ಬೆಳೆ ಬೆಳೆಯಲು ರೈತರು ಮುಂದಾಗುವಂತೆ ನಂಜನಗೂಡು ತಾಲ್ಲೂಕು ಸಹಾಯಕ ತೋಟಗಾರಿಕೆ ಹಿರಿಯ ನಿರ್ದೇಶಕ ಸಿ. ಚಂದ್ರು ಕರೆ ನೀಡಿದರು.
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಈಶ್ವರಗೌಡನಹಳ್ಳಿ ಗ್ರಾಮದ ಬಿ.ಎ.ಶ್ರೀನಿವಾಸ್ ಜಮೀನಿನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಪತಂಜಲಿ ಫುಡ್ಸ್ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಳೆ ಬೆಳೆ ಮೆಗಾ ಡ್ರೈ ಪ್ರೋತ್ಸಾಹ ಅಭಿಯಾನಕ್ಕೆ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
‘ಭಾರತದಲ್ಲಿ ಖಾದ್ಯ ತೈಲದ ವಾರ್ಷಿಕ ಬೇಡಿಕೆಯನ್ನು ಸ್ಥಳೀಯ ಉತ್ಪಾದನೆಯಿಂದ ಪೂರೈಸಲು ಸಾಧ್ಯವಾಗದ ಕಾರಣ, ಸುಮಾರು ₹1 ಲಕ್ಷ ಕೋಟಿ ಮೌಲ್ಯದ ಖಾದ್ಯ ತೈಲವನ್ನು ಹೊರದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಖಾದ್ಯ ತೈಲದ ಆಮದು ವೆಚ್ಚವನ್ನು ಕಡಿಮೆ ಮಾಡುವ ದೃಷ್ಟಿಯಲ್ಲಿ ತೈಲ ಬೆಳೆಗಳ ಉತ್ಪಾದನೆಗೆ ಹೆಚ್ಚು ಆದ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಪ್ರಾರಂಭಿಸಿದೆ’ ಎಂದು ತಿಳಿಸಿದರು.
ಪತಂಜಲಿ ಫುಡ್ಸ್ ಲಿಮಿಟೆಡ್ನ ಅಧಿಕಾರಿ ಬಿ.ಎನ್.ನಾಗರಾಜು, ಸಿ.ಸೋಮಣ್ಣ ಹಾಗೂ ಎಂ.ಬಸವರಾಜು ಮಾತನಾಡಿದರು. ತಾಳೆ ಬೆಳೆಯನ್ನು ಖರೀದಿಸಿ ನೇರವಾಗಿ ಹಣವನ್ನು ರೈತರ ಖಾತೆಗೆ ಜಮಾ ಮಾಡುವುದರಿಂದ ಮಾರುಕಟ್ಟೆ ಸಮಸ್ಯೆಯಾಗಲೀ, ಅಥವಾ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ಆದ್ದರಿಂದ ತಾಳೆ ಬೆಳೆ ಬೆಳೆದು ಆರ್ಥಿಕವಾಗಿ ಸಧೃಡರಾಗುವಂತೆ ರೈತರಿಗೆ ಸಲಹೆ ನೀಡಿದರು. ರೈತರು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.