ADVERTISEMENT

ಕಾರ್ಮಿಕರಿಗೆ ಕನಿಷ್ಠವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2018, 11:39 IST
Last Updated 19 ಸೆಪ್ಟೆಂಬರ್ 2018, 11:39 IST
ವಿವಿಧ ಕಾರ್ಮಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಯಿತು
ವಿವಿಧ ಕಾರ್ಮಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಯಿತು   

ಮೈಸೂರು: ಎಲ್ಲ ದುಡಿಯುವ ವರ್ಗಗಳಿಗೆ ₹ 18 ಸಾವಿರ ಕನಿಷ್ಠ ವೇತನ ನಿಗದಿಗೊಳಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಸೇರಿದ ಎಐಟಿಯುಸಿ ಕಾರ್ಯಕರ್ತರು, ಬಿಜೆಪಿ ಸರ್ಕಾರವು ಬಂಡವಾಳ ಶಾಹಿಗಳ ಪರವಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ. ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ದೇಣಿಗೆ ನೀಡಿ ಕಾರ್ಮಿಕರಿಗೆ ವೇತನ ನೀಡಲು ಮೀನ ಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.

ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಗಳನ್ನು ಅನುಸರಿಸಿದರೆ ದೇಶಕ್ಕೆ ಅನುಕೂಲವಿಲ್ಲ. ಈ ಸತ್ಯ ಬಿಜೆಪಿಗೆ ಗೊತ್ತಿದ್ದೂ ಜನವಿರೋಧಿ ಚಟುವಟಿಕೆಯಲ್ಲಿ ತೊಡಗಿದೆ. ಇನ್ನು ಮುಂದಾದರೂ ಜನಪರವಾದ ನೀತಿಗಳನ್ನು ಅಳವಡಿಸಿಕೊಳ್ಳದೇ ಇದ್ದಲ್ಲಿ ಜನರು ದಂಗೆಯೇಳಬೇಕಾಗುತ್ತದೆ ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ ಎಚ್ಚರಿಸಿದರು.

ADVERTISEMENT

2013ರ ಲೋಕಸಭಾ ಚುನಾವಣೆ ವೇಳೆ ಹಲವು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಜನವಿರೋಧಿ ನೀತಿ ಪ್ರದರ್ಶನ ಮಾಡಿತು. ಅಲ್ಲದೇ ಕಾರ್ಮಿಕರನ್ನು ಕಾಲ ಕಸದಂತೆ ನಡೆಸಿಕೊಂಡಿತು. ಕಾರ್ಮಿಕರನ್ನು ಗುಲಾಮರಂತೆ ನಡೆಸಿಕೊಂಡರೆ ದೇಶದ ಅಭಿವೃದ್ಧಿಗೆ ಮಾರಕ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕಾರ್ಮಿಕ ಕಾನೂನುಗಳ ಸುಧಾರಣೆ ಹೆಸರಿನಲ್ಲಿ ಬಂಡವಾಳಶಾಯಿಗಳನ್ನು ಓಲೈಸಲಾಗುತ್ತಿದೆ. ಕಾರ್ಪೊರೇಟ್ ವಲಯದ ಪರವಾರ ಕಾನೂನುಗಳಿಗೆ ತಿದ್ದುಪಡಿ ತರಬೇಕು. ಸಮರ್ಪಕ ಉದ್ಯೋಗ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ರಾಜು, ಮುಖಂಡರಾದ ರೇವಣ್ಣ, ಶಿವಣ್ಣ, ರಾಮು, ಎಚ್.ಬಿ.ರಾಮಕೃಷ್ಣ, ಡಿ.ಸುರೇಶ್, ಬಸವರಾಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.