ಮೈಸೂರು: ‘ಶೈಕ್ಷಣಿಕ ಅರ್ಹತೆಯೊಂದಿಗೆ ಕೌಶಲವನ್ನೂ ರೂಢಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯವಾಗಲಿದೆ’ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ನೌಕರರ ಸಹಕಾರ ಪತ್ತಿನ ಸಂಘ ಭಾನುವಾರ ಆಯೋಜಿಸಿದ್ದ ನಿವೃತ್ತ ನೌಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆ ಕಡಿಮೆ ಮಾಡಿ ಓದಿನ ಕಡೆಗೆ ಹೆಚ್ಚಿನ ಗಮನ ನೀಡಬೇಕು. ವಿದ್ಯಾರ್ಥಿ ಜೀವನದಲ್ಲಿ ಪ್ರಾಮಾಣಿಕತೆ ಹಾಗೂ ಪರಿಶ್ರಮ ಮುಖ್ಯ. ಪ್ರತಿಯೊಬ್ಬರೂ ಸ್ಪಷ್ಟ ಗುರಿಯೊಂದಿಗೆ ಮುಂದೆ ಸಾಗಬೇಕು’ ಎಂದರು.
‘ವೃತ್ತಿಯಲ್ಲಿದ್ದ ಮೇಲೆ ಒಂದು ದಿನ ನಿವೃತ್ತಿ ಹೊಂದಲೇಬೇಕು. ನಿವೃತ್ತರಾಗಿದ್ದೇವೆ ಎಂದು ಬೇಸರಪಟ್ಟುಕೊಳ್ಳದೆ ಆರೋಗ್ಯದ ಕಡೆ ಕಾಳಜಿ ವಹಿಸಿ. ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಿ’ ಎಂದು ಹೇಳಿದರು.
ವಿ.ವಿ ಹಣಕಾಸು ಅಧಿಕಾರಿ ಡಾ. ಸಂಗೀತಾ ಗಜಾನನ ಭಟ್ ಮಾತನಾಡಿ, ‘ಯಾವುದೇ ಕೆಲಸವಿರಲಿ ಸಹಕಾರವಿದ್ದಾಗ ಯಶಸ್ಸು ಖಚಿತ. ಕಠಿಣ ಪರಿಶ್ರಮ ಇದ್ದಾಗ ಮಾತ್ರ ಸಾಧಿಸಲು ಸಾಧ್ಯವಾಗುತ್ತದೆ. ಮೈಸೂರು ವಿಶ್ವವಿದ್ಯಾಲಯದ ನೌಕರರ ಸಹಕಾರ ಪತ್ತಿನ ಸಂಘದ ಹಣಕಾಸು ನಿರ್ವಹಣೆ ಉತ್ತಮವಾಗಿದೆ. ಆರ್ಥಿಕ ಶಿಸ್ತು ಅಳವಡಿಸಿಕೊಂಡಾಗ ಅದ್ಭುತ ಕೆಲಸ ಮಾಡಬಹುದು’ ಎಂದರು.
ನಿವೃತ್ತ ನೌಕರರನ್ನು ಗೌರವಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು.
ಸಂಘದ ಅಧ್ಯಕ್ಷ ಎಂ.ಎನ್. ಹರೀಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಕೆ.ಬಿ. ಮೂರ್ತಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.