ಮೈಸೂರು: ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳಿಗೆ ಇಸ್ಕಾನ್ ಅಕ್ಷಯ ಪಾತ್ರೆ ಮೂಲಕ ಬಿಸಿಯೂಟ ವಿತರಿಸುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಎಐಯುಟಿಯುಸಿಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
‘ಕಳೆದ 22 ವರ್ಷಗಳಿಂದ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಬಡ ಹೆಣ್ಣು ಮಕ್ಕಳು ಇಸ್ಕಾನ್ ಅಕ್ಷಯ ಪಾತ್ರೆ ಯೋಜನೆಯಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇಸ್ಕಾನ್ ಯೋಜನೆಗೆ ಒಳಪಟ್ಟ ಶಾಲೆಯಿಂದ ಕನಿಷ್ಠ ಒಬ್ಬ ಅಕ್ಷರ ದಾಸೋಹ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಬಡ ಹೆಣ್ಣಮಕ್ಕಳಿಗೆ ತೊಂದರೆಯಾಗುವ ಕಾರ್ಯಕ್ರಮ ಅನುಷ್ಠಾನ ಮಾಡಬಾರದು’ ಎಂದು ಆಗ್ರಹಿಸಿದರು.
‘ಎನ್ಜಿಒಗಳು ಸರ್ಕಾರದ ಹಣವನ್ನೇ ಪಡೆದು ಬಿಸಿಯೂಟ ಮಾಡಿಕೊಡುತ್ತಿದ್ದು, ಇದರ ಬದಲಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿರುವ ಬಿಸಿಯೂಟ ಕಾರ್ಮಿಕರ ಹಿತದೃಷ್ಟಿಯಿಂದ ಯಥಾಸ್ಥಿತಿ ಮುಂದುವರಿಸಬೇಕು. ಪ್ರತಿ ಶಾಲೆಗಳಲ್ಲಿ ಮೂಲಸೌಕರ್ಯಗಳಾದ ಸ್ವಚ್ಛ ಕುಡಿಯುವ ನೀರು, ಅಡುಗೆ ಮನೆ, ದಿನಸಿ ಸಾಮಗ್ರಿ ಮುಂತಾದವುಗಳನ್ನು ಕಾಲಕಾಲಕ್ಕೆ ನೀಡಿ, ಬಿಸಿಯೂಟ ಕಾರ್ಮಿಕರಿಗೂ ಕೆಲಸದ ಭದ್ರತೆ ನೀಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.