ಪಿರಿಯಾಪಟ್ಟಣ: ಯುವ ಜನರು ದುಶ್ಚಟಗಳಿಂದ ಜೀವನ ಹಾಳು ಮಾಡಿಕೊಳ್ಳದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಹೇಳಿದರು.
ಮಾದಕ ವಸ್ತು ವ್ಯಸನಮುಕ್ತ ದಿನದ ಅಂಗವಾಗಿ ಶುಕ್ರವಾರ ಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ನಿಷೇಧದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ, ಕಾಲೇಜು ಮತ್ತು ಆಸ್ಪತ್ರೆಗಳ ಬಳಿ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಳೆಯ ವಯಸ್ಸಿನವರು ಕುತೂಹಲದಿಂದ ಮಾದಕ ವಸ್ತು ಸೇವಿಸಿ ವ್ಯಸನಿಗಳಾಗುತ್ತಿದ್ದಾರೆ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಮಾದಕ ವ್ಯಸನಿಗಳನ್ನು ಕಳ್ಳತನ, ಅತ್ಯಾಚಾರ ಮತ್ತಿತರ ಅಪರಾಧ ಕೃತ್ಯಗಳಿಗೆ ಬಳಸಿಕೊಂಡು ಸಮಾಜದ ನೆಮ್ಮದಿ ಕೆಡಿಸುವ ಒಂದು ವರ್ಗವೇ ಇದೆ. ಗಾಂಜಾ, ಚರಸ್, ತಂಬಾಕು ಪದಾರ್ಥಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳುವ ಅಗತ್ಯ ಎಂದು ತಿಳಿಸಿದರು.
ಬಿಇಒ ರವಿಪ್ರಸನ್ನ ಮಾತನಾಡಿ, ಮಾದಕ ವ್ಯಸನಿಗಳು ಸಮಾಜಕ್ಕೆ ಹೊರೆಯಾಗುತ್ತಿದ್ದಾರೆ. ಸಮಾಜದ ಸ್ವಾಸ್ಥ್ಯ ಹಾಳು ಕಲುಷಿತಗೊಳಿಸುತ್ತಿದ್ದಾರೆ. ಯುವಜನತೆ ಕ್ಷಣಿಕ ಸುಖಕ್ಕಾಗಿ ಮಾದಕ ವ್ಯಸನಿಗಳಾಗುವುದನ್ನು ತಡೆಗಟ್ಟಬೇಕಿದೆ ಎಂದರು.
ಬಿಜಿಎಸ್ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಪ್ರವೀಣ್, ಪೊಲೀಸ್ ಸಿಬ್ಬಂದಿ ನವೀನ್, ಅಣ್ಣಯ್ಯ, ಮಧು, ಗಣೇಶ್, ಪುನೀತ್, ಅರುಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.