
ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ನಿಲ್ಲಿಸುವಂತೆ ಒತ್ತಾಯಿಸಿ ಚಾಮರಾಜನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರ ಮನವಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಆಲಿಸಿದರು
ಮೈಸೂರು/ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭಿಸಿರುವುದನ್ನು ಖಂಡಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಮೈಸೂರು ಜಿಲ್ಲೆಯ ನಾಗರಹೊಳೆ ಪ್ರದೇಶದಲ್ಲಿ ಹುಲಿ ಸಫಾರಿಯು ಮಧ್ಯಾಹ್ನ 9 ಪ್ರವಾಸಿಗರೊಂದಿಗೆ ಆರಂಭವಾಯಿತು.
‘ಮಾನವ–ವನ್ಯಜೀವಿ ಸಂಘರ್ಷ ಕುರಿತು ವಸ್ತುಸ್ಥಿತಿ ಅಧ್ಯಯನ ಮಾಡದೆತಾಂತ್ರಿಕ ಸಮಿತಿ ನೀಡಿರುವ ಮಧ್ಯಂತರ ವರದಿಯ ಆಧಾರದ ಮೇಲೆ ಸರ್ಕಾರವು ಸಫಾರಿ ಮರು ಆರಂಭಿಸಿರುವುದು ಖಂಡನೀಯ’ ಎಂದು ಚಾಮರಾಜನಗರದಲ್ಲಿ ರೈತ ಮುಖಂಡರು ಆಕ್ರೋಶವ್ಯಕ್ತಪಡಿಸಿದರು.
‘ಸಫಾರಿ ಬಂದ್ ಆಗುವವರೆಗೂ ನಿರಂತರ ಪ್ರತಿಭಟನೆ ನಡೆಸಲಾಗುವುದು. ಫೆ.25ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಧರಣಿ ನಡೆಸಲಾಗುವುದು. ಮಣಿಯದಿದ್ದರೆ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಾಗುವುದು’ ಎಂದು ಮುಖಂಡ ಹೊನ್ನೂರು ಪ್ರಕಾಶ್ ತಿಳಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ‘ರೈತ ಸಂಘಟನೆಗಳ ವಿರೋಧವನ್ನು ಅರಣ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅಕ್ರಮ ರೆಸಾರ್ಟ್
ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಬಂಡೀಪುರ–ನಾಗರಹೊಳೆ ಸಫಾರಿಯನ್ನು ಸರ್ಕಾರ ಏಕಾಏಕಿ ಪುನರಾರಂಭ ಮಾಡಿಲ್ಲ. ತಜ್ಞರ ಸಮಿತಿ ಮಾಡಿ, ಚರ್ಚಿಸಿಯೇ ತೀರ್ಮಾನಿಸಿದೆ. ರೈತರು ಪ್ರತಿಭಟನೆಗೆ ಮುಂದಾದರೆ ಏನೂ ಹೇಳಲಾಗದುಕೆ.ವೆಂಕಟೇಶ್ ಪಶು ಸಂಗೋಪನಾ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.