ADVERTISEMENT

ಮೈಸೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರನ ತಲೆ ಮೇಲೆ ಹರಿದ ಬಸ್ ಟಯರ್

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 9:24 IST
Last Updated 19 ಫೆಬ್ರುವರಿ 2020, 9:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ನಗರದ ಆಕಾಶವಾಣಿ ಬಳಿ ಬುಧವಾರ ಬೈಕ್‌ ಸವಾರರೊಬ್ಬರು ಸಿಗ್ನಲ್‌ ಜಂಪ್ ಮಾಡುವಾಗ, ಮಿನಿ ಬಸ್‌ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ನಾರಾಯಣಗೌಡ (50) ಮೃತರು.

ಕೆಲಸದ ನಿಮಿತ್ತ ನಾರಾಯಣಗೌಡ ಮೈಸೂರಿಗೆ ಬಂದಿದ್ದರು. ಸಿಗ್ನಲ್‌ ಬೀಳುವ ಮುನ್ನವೇ ದಾಟಲು ಮುಂದಾಗುತ್ತಿದ್ದಂತೆ, ಕೆಆರ್‌ಎಸ್‌ ಕಡೆಯಿಂದ ವೇಗವಾಗಿ ಬರುತ್ತಿದ್ದ ಎಸ್‌.ಎಸ್‌.ಟೆಕ್ನಾಲಜೀಸ್‌ನ ಮಿನಿ ಬಸ್‌ ಡಿಕ್ಕಿ ಹೊಡೆದಿದೆ. ಬೈಕ್‌ ಸವಾರ ಕೆಳಗೆ ಬಿದ್ದಿದ್ದಾರೆ. ಇವರ ತಲೆಯ ಮೇಲ್ಭಾಗ ಬಸ್‌ನ ಚಕ್ರ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟರು ಎಂದು ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಹೆಲ್ಮೆಟ್ ಧರಿಸದ ನಾರಾಯಣಗೌಡ ಸಂಚಾರ ನಿಯಮ ಉಲ್ಲಂಘಿಸಿ ಸಿಗ್ನಲ್‌ ಜಂಪ್‌ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕೆ.ಆರ್.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತರ ಕುಟುಂಬದವರಿಗೆ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ವಿ.ವಿ.ಪುರಂ ಸಂಚಾರ ಪೊಲೀಸ್‌ ಠಾಣೆಯ ಪೊಲೀಸರು ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.