ADVERTISEMENT

ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ: ಭೈರಪ್ಪ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 13:54 IST
Last Updated 29 ಮಾರ್ಚ್ 2024, 13:54 IST
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ಶುಕ್ರವಾರ ಭೇಟಿಯಾಗಿ ಆಶೀರ್ವಾದ ಪಡೆದರು
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ಶುಕ್ರವಾರ ಭೇಟಿಯಾಗಿ ಆಶೀರ್ವಾದ ಪಡೆದರು   

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದರು.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಕ್ರವಾರ ಭೈರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

‘ರಾಜ್ಯದಲ್ಲಿ ನನ್ನ ಪ್ರಕಾರ ಈ ಬಾರಿ ಮತ ವಿಭಜನೆಯಾಗುತ್ತದೆ. ಆದರೆ, ಬಿಜೆಪಿಯು ತೀರಾ ಸೋತು ಹೋಗುವುದಿಲ್ಲ. ಕೊನೆ ಪಕ್ಷ ಅರ್ಧಕ್ಕಿಂತಲೂ ಜಾಸ್ತಿ ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿದುಕೊಂಡಿದ್ದೇನೆ’ ಎಂದರು.

ADVERTISEMENT

‘ಕರ್ನಾಟಕದಲ್ಲಿ ಬಿಜೆಪಿಗೆ ಏಕೆ ಈ ಸ್ಥಿತಿ ಬಂದಿದೆ’ ಎಂಬ ಪ್ರಶ್ನೆಗೆ, ‘ರಾಜ್ಯದಲ್ಲಿ ಹಿಂದೆ ಇದ್ದ ಬಿಜೆಪಿ ಸರ್ಕಾರ ಪರಿಣಾಮಕಾರಿಯಾಗಿರಲಿಲ್ಲ. ಅಧಿಕಾರಿಗಳನ್ನು ನಿಯಂತ್ರಿಸುವುದು ಸಾಧ್ಯವಾಗಿರಲಿಲ್ಲ. ಅವರ ಕುರಿತು ಮೃದುವಾಗಿದ್ದರು. ಆದರೆ, ಈಗಿನ ಕಾಂಗ್ರೆಸ್‌ನವರು ಅಧಿಕಾರಿಗಳ ಮೇಲೆ ಬಹಳ ಜೋರಾಗಿದ್ದಾರೆ. ಆದರೆ, ಅವರು ಹೋಗುತ್ತಿರುವ ದಾರಿ ಸರಿ ಇಲ್ಲ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ, ಎಲ್ಲವನ್ನೂ ಉಚಿತವಾಗಿ ಕೊಡುವುದು ಸರಿಯಲ್ಲ. ಅದು ಜನಪ್ರಿಯತೆ ತಂದು ಕೊಟ್ಟಿರಬಹುದೇ ಹೊರತು ಅರ್ಥ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ’ ಎಂದರು.

‘ಎಲ್ಲವನ್ನೂ ಉಚಿತವಾಗಿ ಕೊಡುತ್ತಿರುವುದರಿಂದ ರಾಜ್ಯ ಸರ್ಕಾರದಲ್ಲಿ ಹಣವೇ ಇಲ್ಲದಂತಾಗಿದೆ. ಹೀಗಾಗಿಯೇ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕೇಂದ್ರದಿಂದ ಕೊಟ್ಟಿದ್ದನ್ನೆಲ್ಲಾ ಖರ್ಚು ಮಾಡಿಕೊಂಡಿರುತ್ತಾರೆ. ಈಗ, ವಿತ್ತ ಸಚಿವರನ್ನು ಬೈಯ್ಯುತ್ತಿದ್ದಾರೆ. ಭಾಷೆಯನ್ನು ಗೌರವಯುತವಾಗಿ ಬಳಸುತ್ತಿಲ್ಲ. ಟೀಕಿಸುತ್ತಿರುವ ಸಂಸ್ಕೃತಿ ಸರಿ ಇಲ್ಲ’ ಎಂದರು.

‘ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಗ್ಯಾರಂಟಿಯಾಗಿ ಹೇಳಬಹುದು. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಕಷ್ಟ. ರಾಜ್ಯದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಆಗಿದೆ. ಉತ್ತರಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಬಿಜೆಪಿ ಸರ್ಕಾರ ನಡೆದುಕೊಂಡಿದ್ದರೆ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಬಹುದಿತ್ತು. ಯೋಗಿ ಆದಿತ್ಯನಾಥ ಅವರಂತಹ ಮುಖ್ಯಮಂತ್ರಿಯನ್ನು ಕಂಡಿಲ್ಲ’ ಎಂದರು.

‘ಕರ್ನಾಟಕದಲ್ಲಿ ಸ್ವಲ್ಪ ಆ ಕಡೆಗೂ, ಈ ಕಡೆಗೂ ಎನ್ನುವಂತಹ ಸ್ಥಿತಿ ಇದೆ’ ಎಂದ ಅವರು, ‘ಕರ್ನಾಟಕದಲ್ಲಿ ಮೋದಿ ಅಲೆ ಕಡಿಮೆ ಆಗಿದೆಯಾ’ ಎಂಬ ಪ್ರಶ್ನೆಗೆ ‘ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.