ADVERTISEMENT

ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಿ

ಮುಖ್ಯಮಂತ್ರಿಯೊಂದಿಗೆ ಚರ್ಚೆ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2019, 10:29 IST
Last Updated 30 ಡಿಸೆಂಬರ್ 2019, 10:29 IST
ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ನಡೆದ ಸಮಾವೇಶವನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು
ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ನಡೆದ ಸಮಾವೇಶವನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು   

ನಂಜನಗೂಡು: ‘ಅರೆ ಸರ್ಕಾರಿ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ರಾಜ್ಯ ರಸ್ತೆ ನಿಗಮಗಳ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ 9ನೇ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಾರಿಗೆ ಇಲಾಖೆಯ ಅರೆ ಸರ್ಕಾರಿ ನೌಕರರು ಅಡ್ಡಕತ್ತರಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹಗಲು ಇರುಳೆನ್ನದೆ ಜನಸೇವೆ ಮಾಡುತ್ತಿರುವ ಸಾರಿಗೆ ನೌಕರರಿಗೆ ಅಭದ್ರತೆ ಕಾಡದಂತೆ ನೋಡಿಕೊಳ್ಳಬೇಕಾದದ್ದು ಸರ್ಕಾರದ ಕರ್ತವ್ಯ. ನಿಗಮಗಳ ನೌಕರರಿಗೆ ಕಾನೂನಿನ ತೊಡಕಿದ್ದರೂ ಅದನ್ನು ಸರಿಪಡಿಸಿ ಅವರ ಹಕ್ಕುಗಳು ಮತ್ತು ಸವಲತ್ತುಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸ ಲಾಗುವುದು’ ಎಂದು ತಿಳಿಸಿದರು.

ADVERTISEMENT

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಮಾತನಾಡಿ, ‘ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ವರದಿ ನೀಡಲಾಗುವುದು’ ಎಂದರು.

ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗೆ ಸಂತಾಪ ಸೂಚಿಸಲಾಯಿತು.

ಶಾಸಕರಾದ ಅಮರೇಗೌಡ ಭಯ್ಯಾಪುರ, ಸಿ.ಎಸ್.ನಿರಂಜನ್‌ ಕುಮಾರ್, ಮಾಜಿ ಶಾಸಕರಾದ ಕೆ.ಆರ್. ಮಲ್ಲಿಕಾರ್ಜುನಪ್ಪ, ಸಿ.ಗುರುಸ್ವಾಮಿ, ರಾಜ್ಯ ಚುನಾವಣಾ ಆಯೋಗದ ಅಧಿಕಾರಿ ಡಿ.ಭಾರತಿ, ಮುಖಂಡರಾದ ಎಚ್.ಎನ್.ನಂಜಪ್ಪ, ಕಡಸೋಗೆ ಶಿವಬಸಪ್ಪ, ಸಿಂಧೂವಳ್ಳಿ ಕೆಂಪಣ್ಣ, ಜಿ.ಪಂ ಸದಸ್ಯರಾದ ಸದಾನಂದ, ಗುರುಸ್ವಾಮಿ, ಲೀಲಾವತಿ ಸಿದ್ದವೀರಪ್ಪ, ಸಾರಿಗೆ ನೌಕರರ ಸಂಘದ ಅಧ್ಯಕ್ಷ ಸಂಗಮನಾಥ ರಬಶೆಟ್ಟಿ, ಎಂ.ಚಿನ್ನಸ್ವಾಮಿ, ಶಿವತೀರ್ಥಪ್ಪ, ಎಂ. ಲೋಕೇಶ್, ಎ.ಬಿ.ನಂಜುಂಡಸ್ವಾಮಿ, ಬಿ.ರಾಜೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.