ADVERTISEMENT

ವಿಕಸಿತ ಭಾರತ ಸುತ್ತೂರಿನಲ್ಲಿ ಸಾಕಾರ: ಕೃಷಿ ವಿಚಾರ ಸಂಕಿರಣದಲ್ಲಿ ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 4:37 IST
Last Updated 19 ಜನವರಿ 2026, 4:37 IST
ನಂಜನಗೂಡು ತಾಲ್ಲೂಕಿನ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಕೃಷಿ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.
ನಂಜನಗೂಡು ತಾಲ್ಲೂಕಿನ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಕೃಷಿ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.   

ನಂಜನಗೂಡು: ಕೇವಲ ನಗರ ಪ್ರದೇಶಗಳು ಅಭಿವೃದ್ಧಿ ಹೊಂದಿದರೆ ಸಾಲುವುದಿಲ್ಲ, ಗ್ರಾಮೀಣ ಭಾಗದ ರೈತರು, ಬಡವರ ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತ ಕಲ್ಪನೆ ಸುತ್ತೂರು ಶ್ರೀಮಠದ ಸೇವೆಯಿಂದ ಸುತ್ತೂರಿನಲ್ಲಿ ಸಾಕಾರಗೊಂಡಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ತಾಲ್ಲೂಕಿನ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಕೃಷಿ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಅತಿವೃಷ್ಟಿ, ಅನಾವೃಷ್ಟಿಗಳಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಕಾಂಗ್ರೆಸ್ ಸರ್ಕಾರದ ಎರಡುವರೆ ವರ್ಷಗಳ ಆಡಳಿತದಲ್ಲಿ ರಾಜ್ಯದ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆತು ಬಡವರ ಬದುಕು ಹಸನಾಗಿ, ರೈತ ನೆಮ್ಮದಿಯಿಂದ ಊಟಮಾಡುವ ಪರಿಸ್ಥಿತಿ ಸೃಷ್ಟಿಯಾದಾಗ ಮಾತ್ರ ದೇಶ ಉದ್ದಾರವಾದಂತೆ, ಹಲವು ದಶಕಗಳಿಂದ ಶ್ರೀ ಮಠ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ರೈತರಿಗೆ ತಂತ್ರಜ್ಞಾನ ಆಧಾರಿತ ಆಧುನಿಕ ಕೃಷಿಗೆ ದಿಕ್ಕು ತೋರಿಸುವ ಕೆಲಸ ನಡೆದಿದೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಮಾರುಕಟ್ಟೆ ಮಾಡುವಲ್ಲಿ ರೈತ ಸೋತಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, ರೈತರಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದರು. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದ್ದರು. ಈ ಭಾಗ ಹಾಗೂ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಕೆರೆಗಳಿಗೆ ನದಿಮೂಲದಿಂದ ನೀರು ತುಂಬಿಸುವ ಕಾರ್ಯ ನಡೆಸಿದ್ದರು. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚು ಹಣ ನೀಡಿದ್ದರು ಎಂದು ಹೇಳಿದರು.

ಕೃಷಿ ಸಚಿವ ಚೆಲುವರಾಯ ಸ್ವಾಮಿ ಮಾತನಾಡಿ ಸುತ್ತೂರು ಶ್ರೀ ಮಠ ಕೃಷಿ, ಆರೋಗ್ಯ, ಶಿಕ್ಷಣ, ಆಧ್ಯಾತ್ಮಿಕ, ಸಮಾಜ ಸೇವಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಮಾಡುತ್ತಿದೆ. ಆಧುನಿಕ ಕೃಷಿ ಮೂಲಕ ರೈತರ ಆದಾಯ ಹೆಚ್ಚಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಒಂದೂವರೆ ಸಾವಿರ ಕೋಟಿ ರೈತರಿಗೆ ಬೆಳೆ ವಿಮೆ ಮೂಲಕ ಪರಿಹಾರ ದೊರಕುವಂತೆ ನೋಡಿಕೊಂಡಿದೆ. ಪ್ರತಿ ವರ್ಷ 27 ಲಕ್ಷ ರೈತರು ಬೆಳೆ ವಿಮೆಗಾಗಿ ನೋಂದಾಯಿಸಿಕೊಳ್ಳುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ರೈತರ ಅನುಕೂಲಕ್ಕಾಗಿ ಕೃಷಿ ಹೊಂಡ ನಿರ್ಮಿಸಿಕೊಟ್ಟಿದೆ, ಒಂದು ಕೋಟಿ ಬೆಲೆಯ ಕಬ್ಬು ಕಟಾವು ಮಾಡುವ ಯಂತ್ರ ಖರೀದಿಸಲು ಶೇ 50ರ ಸಹಾಯಧನದಂತೆ ಪ್ರತಿ ರೈತರಿಗೆ ₹50 ಲಕ್ಷ ಸಹಾಯ ಧನ ನೀಡುತ್ತಿದೆ. ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗಿದೆ ಎಂದು ಹೇಳಿದರು.

ರಾಗಿ ಬೀಸುವ ಸ್ಪರ್ಧೆಯಲ್ಲಿ ವಿಜೇತರಾದ ಕೆಂಪನಪುರದ ತಾಯಿ ಮಣಿ, ಸೋನಹಳ್ಳಿಯ ಜ್ಯೋತಿ, ಸೂರಳ್ಳಿ ಗ್ರಾಮದ ನಿರ್ಮಲ,ಸೋನಹಳ್ಳಿಯ ಶಶಿಕಲಾ ಅವರುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ, ಕೇರಳದ ಸ್ವಾಮಿ ಫ್ರಭಾಕರಾನಂದ ಮಹಾರಾಜ್, ದತ್ತ ಸಾಯಿ ಪೀಠದ ಅರ್ಜುನ ಅವಧೂತ ಗುರೂಜಿ, ಪ್ರಗತಿಪರ ರೈತ ಮಹಿಳೆ ರಾಜೇಶ್ವರಿ ವಿ.ಪಾಟೀಲ್, ಕೃಷಿ ಉದ್ಯಮಿ ಯೋಗೀಶ್ ಅಪ್ಪಾಜಯ್ಯ, ಡಾ.ಸುಭಾಷ್ ಮಲ್ಗನ್, ಸಂಸದ ಶ್ರೇಯಸ್ ಎಂ.ಪಟೇಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.