ಮೈಸೂರು: ಕೇಂದ್ರ ಸರ್ಕಾರದಿಂದ ಅನುದಾನ ತರಲು ಬಿಜೆಪಿಯಲ್ಲೇ ಬೆಳೆದ ಬಿ.ಎಸ್.ಯಡಿಯೂರಪ್ಪ ಅವರ ಕೈಯಲ್ಲೂ ಆಗಲಿಲ್ಲ. ಇನ್ನು ಜನತಾದಳದಿಂದ ಹೋದಬಸವರಾಜ ಬೊಮ್ಮಾಯಿ ಅವರಿಂದ ಆಗುತ್ತದೆಯೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯದಲ್ಲಿ ಮತ್ತೊಮ್ಮೆ ಜನತಾದಳದಿಂದ ಬಂದವರು ಮುಖ್ಯಮಂತ್ರಿಯಾಗಿದ್ದಾರೆ. ಇವರ ಮಾತನ್ನು ಹೈಕಮಾಂಡ್ ಕೇಳುವುದು ಅನುಮಾನ ಎಂದು ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಸರ್ಕಾರ ಕೊರೊನಾ 3ನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಸಂಕಷ್ಟ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.ಸಚಿವರು ಇಲ್ಲದಿದ್ದರೂ ಅಧಿಕಾರಿಗಳ ಮೂಲಕ ನಿರ್ವಹಣೆ ಮಾಡಬೇಕು. ಸಚಿವರು ಇದ್ದರೆ ಅವರೇನು ಗಡಿಗೆ ಬೀಗ ಹಾಕಲು ಸಾಧ್ಯವಿಲ್ಲ. ಅಧಿಕಾರಿಗಳ ಮೂಲಕ ಈ ಕೆಲಸ ಮಾಡಬೇಕು. ಏಕ ವ್ಯಕ್ತಿಯಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ರಚನೆಯಾಗಬೇಕು. ಕೇರಳ, ಮಹಾರಾಷ್ಟ್ರದಿಂದ ಬರುವವರನ್ನು ತಡೆಯಬೇಕು ಎಂದರು.
ಸರ್ಕಾರ ಕಳೆದ ಬಾರಿಯ ನೆರೆ ಪರಿಹಾರವನ್ನೇ ಇನ್ನೂ ನೀಡಿಲ್ಲ. ಮನೆ ಬಿದ್ದವರಿಗೆ ₹ 10 ಸಾವಿರ ಪರಿಹಾರ ಸಹ ಬಂದಿಲ್ಲ ಎಂದು ಕಿಡಿಕಾರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.