ADVERTISEMENT

ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ: ರವಿಕೃಷ್ಣಾರೆಡ್ಡಿ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 3:34 IST
Last Updated 4 ಸೆಪ್ಟೆಂಬರ್ 2021, 3:34 IST
   

ನಂಜನಗೂಡು: ನಗರದ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿರುವ ಆರೋಪದಡಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಸೇರಿದಂತೆ ಹಲವರ ವಿರುದ್ಧ ತಹಶೀಲ್ದಾರ್ ಮೋಹನಕುಮಾರಿ ಅವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ರವಿಕೃಷ್ಣಾರೆಡ್ಡಿ, ಮರಡಿಹುಂಡಿ ಗ್ರಾಮದ ನಟರಾಜು ಸೇರಿದಂತೆ 15ರಿಂದ 20 ಜನರ ಗುಂಪು ಆ.31ರಂದು ಸಂಜೆ ತಾಲ್ಲೂಕು ಕಚೇರಿಗೆ ಲಗ್ಗೆ ಹಾಕಿ, ಕರ್ತವ್ಯದಲ್ಲಿದ್ದ ದ್ವಿತೀಯ ದರ್ಜೆ ಸಹಾಯಕ ಶ್ರೀನಿವಾಸ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮರಡಿಹುಂಡಿ ನಟರಾಜು ಎಂಬುವರಿಗೆ ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿದ್ದಾರೆ. ಆ ಅರ್ಜಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವಜಾಗೊಂಡಿರುವ ಬಗ್ಗೆ ತಿಳಿಸಿದ್ದರೂ ಕೇಳಿಲ್ಲ. ನನ್ನ ಕಚೇರಿಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಅನುಮತಿಯಿಲ್ಲದೇ ವಿಡಿಯೊ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್‌ ದೂರಿನಲ್ಲಿ ತಿಳಿಸಿದ್ದಾರೆ.

ನಗರ ಪೊಲೀಸ್ ಠಾಣೆ ಪಿಎಸ್‌ಐ ವಿಜಯರಾಜು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.