ADVERTISEMENT

ಎಕ್ಸ್‌ಪ್ರೆಸ್‌ವೇಗೆ ಕೇಂದ್ರದಿಂದ ₹ 712 ಕೋಟಿ ಬಿಡುಗಡೆ: ಸಂಸದ ಯದುವೀರ್‌ ಮಾಹಿತಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 2:12 IST
Last Updated 25 ಜುಲೈ 2025, 2:12 IST
ಯದುವೀರ್‌
ಯದುವೀರ್‌   

ಮೈಸೂರು: ‘ಬೆಂಗಳೂರು–ಮೈಸೂರು ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ₹712 ಕೋಟಿ ಅನುದಾನ ಬಿಡುಗಡೆ ಮಾಡಿದೆ’ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಈ ಅನುದಾನದಿಂದ ಹಲವು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಹೊಸದಾಗಿ ಎಂಟ್ರಿ-ಎಕ್ಸಿಟ್‌, ರೈಲ್ವೆ ಸೇತುವೆ, ಅಂಡರ್‌ಪಾಸ್‌, ಓವರ್‌ಪಾಸ್‌, ಸರ್ವೀಸ್‌ ರಸ್ತೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಅನೇಕ ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

‘ದಶಪಥ ಕೊನೆಗೊಳ್ಳುವ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಫ್ಲೈ ಓವರ್‌ ನಿರ್ಮಿಸಲಾಗುವುದು. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ಅದನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ. ಹೆದ್ದಾರಿಯು ಜನರಿಗೆ ಇನ್ನಷ್ಟು ಉಪಯುಕ್ತವಾಗಬೇಕು ಎಂಬುದನ್ನು ಮನಗಂಡು ಸರ್ಕಾರ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ವಿವರಿಸಿದ್ದಾರೆ.

ADVERTISEMENT

ವ್ಯಾಪಾರಿಗಳ ಹೊಟ್ಟೆ ಉರಿಸುವ ಯೋಜನೆ: ‘ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ದಿವಾಳಿಯತ್ತ ಸಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗ ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ಬ್ರಹ್ಮಾಸ್ತ್ರ ಬಿಟ್ಟಿದೆ. ಜಿಎಸ್‌ಟಿ ನೋಟಿಸ್‌ ನೀಡಿ ಅವರ ಹೊಟ್ಟೆ ಮೇಲೆ ಪೆಟ್ಟು ನೀಡುತ್ತಿದೆ’ ಎಂದು ಯದುವೀರ್‌ ದೂರಿದ್ದಾರೆ.

‘ವಾಣಿಜ್ಯ ಇಲಾಖೆಯ ಈ ನಡೆ ಖಂಡನೀಯ. ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ವ್ಯಾಪಾರಿಗಳಿಗೆ ನೀಡಿದ ಜಿಎಸ್‌ಟಿ ತೆರಿಗೆ ನೋಟಿಸ್ ನೀಡುವ ನಿರ್ಧಾರ ಕೇಂದ್ರ ಸರ್ಕಾರದ್ದಲ್ಲ. ಇದು ರಾಜ್ಯ ಸರ್ಕಾರದ ತೀರ್ಮಾನ. ಬೇಕರಿ, ಕಾಂಡಿಮೆಂಟ್ ಸೇರಿದಂತೆ ಸಣ್ಣ ವ್ಯಾಪಾರಿಗಳನ್ನೂ ಜಿಎಸ್‌ಟಿ ವ್ಯಾಪ್ತಿಗೆ ತರುವ ಮೂಲಕ ಏಕಾಏಕಿಯಾಗಿ ಲಕ್ಷಾಂತರ ರೂಪಾಯಿ ತೆರಿಗೆ ಸಂಗ್ರಹಿಸುವ ಇರಾದೆ ರಾಜ್ಯ ಸರ್ಕಾರದ್ದಾಗಿದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.