ADVERTISEMENT

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತೆ

ಅನುಮೋದನೆ ಕೊಡಿಸುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಸಚಿವ ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 9:59 IST
Last Updated 14 ಜೂನ್ 2020, 9:59 IST
ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನ
ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನ   

ಮೈಸೂರು: ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್‌) ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತೆ ನೀಡುವ ಸಂಬಂಧ ಸಲ್ಲಿಸಿರುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಕೊಡಿಸಿ ಎಂದು ಕೋರಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರಿಗೆ ಪತ್ರ ಬರೆದಿದ್ದಾರೆ.

‘ಸ್ವಾಯತ್ತೆ ಇಲ್ಲದಿರುವ ಕಾರಣ ನಿರೀಕ್ಷಿತ ಮಟ್ಟದಲ್ಲಿ ಕನ್ನಡ ಭಾಷೆಯ ಸಂಶೋಧನೆ ಮತ್ತು ಅಧ್ಯಯನ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರೂ ಇದುವರೆಗೆ ಸ್ವಾಯತ್ತೆ ದೊರೆತಿಲ್ಲ’ ಎಂದು ಜೂನ್‌ 8ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಶಾಸ್ತ್ರೀಯ ಅತ್ಯುನ್ನತ ಕೇಂದ್ರವು ಅಲ್ಪಾವಧಿಯಲ್ಲೇ ಸ್ವಾಯತ್ತೆ ಪಡೆದುಕೊಂಡು ತಮಿಳು ಶಾಸ್ತ್ರೀಯ ನೆಲೆಗಟ್ಟನ್ನು ವಿಸ್ತರಿಸುವ ಕೆಲಸದಲ್ಲಿ ಸಕ್ರಿಯವಾಗಿದೆ. ಈ ಕೇಂದ್ರದ ಆಶ್ರಯದಲ್ಲಿ ನೂರಾರು ಭಾಷಾ ವಿಜ್ಞಾನಿಗಳು ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಕೇಂದ್ರ ಸರ್ಕಾರವು ಈ ಸಂಸ್ಥೆಗೆ ಕೋಟ್ಯಂತರ ರೂಪಾಯಿ ಅನುದಾನವನ್ನೂ ನೀಡಿದೆ ಎಂದು ವಿವರಿಸಿದ್ದಾರೆ.

ADVERTISEMENT

‘ಕನ್ನಡ ಭಾಷೆಯ ಶಾಸ್ತ್ರೀಯ ನೆಲೆಗಟ್ಟನ್ನು ಬಲಗೊಳಿಸಲು ಹಾಗೂ ನಿರಂತರವಾಗಿ ಕನ್ನಡ ನುಡಿಗೆ ಸಂಬಂಧಿಸಿದ ಸಂಶೋಧನೆ– ಅಧ್ಯಯನ ನಡೆಯಬೇಕಾದರೆ ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರವನ್ನು ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸುವುದು ಅತ್ಯವಶ್ಯವಾಗಿದೆ. ಈ ಕೇಂದ್ರವನ್ನು, ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡುವುದರಿಂದ ಪ್ರಾಚೀನ ಭಾರತೀಯ ಪರಂಪರೆಯ ಹೆಗ್ಗುರುತಾಗಲಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಲ್ಹಾದ ಜೋಶಿ, ಸದಾನಂದ ಗೌಡರಿಗೂ ಪತ್ರ

ಸ್ವಾಯತ್ತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಶಿಫಾರಸು ಮಾಡುವಂತೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಡಿ.ವಿ.ಸದಾನಂದಗೌಡ ಅವರಿಗೂ ಸಿ.ಟಿ.ರವಿ ಪತ್ರ ಬರೆದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.