ADVERTISEMENT

ಆಷಾಢ ಶುಕ್ರವಾರ: ಭಕ್ತರಿಗಿಲ್ಲ ಚಾಮುಂಡಿ ದರ್ಶನ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 15:17 IST
Last Updated 6 ಜುಲೈ 2021, 15:17 IST

ಮೈಸೂರು: ‘ಚಾಮುಂಡೇಶ್ವರಿ ಹಾಗೂ ಉತ್ತನಹಳ್ಳಿಯ ಜ್ವಾಲಾ ತ್ರಿಪುರ ಸುಂದರಿ ದೇವಾಲಯಕ್ಕೆ ಆಷಾಢ ಶುಕ್ರವಾರಗಳು ಸೇರಿದಂತೆ ವಾರಾಂತ್ಯದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಆಷಾಢ ಮಾಸದ ಶುಕ್ರವಾರ ಹಾಗೂ ವಾರಾಂತ್ಯ ದಿನಗಳಂದು ಚಾಮುಂಡೇಶ್ವರಿ ದರ್ಶನಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ಸಾಧ್ಯತೆಯಿದೆ. ಕೋವಿಡ್‌ ಸೋಂಕು ಹರಡುವಿಕೆ ತಡೆಗಟ್ಟಲಿಕ್ಕಾಗಿ ಜುಲೈ 5ರಿಂದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಆಚರಣೆ ಹೊರತುಪಡಿಸಿ, ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.

ನಿಷೇಧಿತ ಅವಧಿಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ಸಹ ನಿಷೇಧಿಸಿದ್ದು, ದೇವಾಲಯದಲ್ಲಿ ದೇಗುಲ ಅಥವಾ ದಾನಿಗಳ ವತಿಯಿಂದಾಗಲಿ ದಾಸೋಹ, ಊಟದ ವ್ಯವಸ್ಥೆ ಮಾಡುವುದನ್ನು ಹಾಗೂ ಪ್ರಸಾದ ವಿತರಣೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ADVERTISEMENT

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿರುವ ದಿನಗಳಂದು ಪೂರ್ತಿ ದಿನ ಹಾಗೂ ಇತರೆ ದಿನಗಳಂದು ಸಂಜೆ 6 ಗಂಟೆಯ ನಂತರ ಚಾಮುಂಡಿ ಬೆಟ್ಟದ ಗ್ರಾಮಸ್ಥರ ವಾಹನಗಳಿಗೆ ಮತ್ತು ತುರ್ತು ಸೇವಾ ವಾಹನ ಹೊರತುಪಡಿಸಿ, ಇತರೆ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಕೇಂದ್ರ–ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ಹೊಂದಿರುವ ಗಣ್ಯ ವ್ಯಕ್ತಿಗಳ ವಾಹನಗಳು ಸಂಚರಿಸಬಹುದಾಗಿದ್ದು, ಚಾಮುಂಡಿಬೆಟ್ಟದ ಗ್ರಾಮದ ಸ್ಥಳೀಯರು ವಾಸಸ್ಥಳದ ಗುರುತಿನ ಚೀಟಿ ಬಳಸಬೇಕಿದೆ.

ನಿಷೇಧಿತ ಅವಧಿಯಲ್ಲಿ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಅಧಿಕಾರಿಗಳು, ಅರ್ಚಕರು, ಸಿಬ್ಬಂದಿಗಳು ಮಾತ್ರ ದೇವಾಲಯದ ಆವರಣದಲ್ಲೇ ನಡೆಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.