ADVERTISEMENT

ನಂಜನಗೂಡು: ವೀರಶೈವ ಲಿಂಗಾಯತ ಸಂಪ್ರದಾಯದಂತೆ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 2:52 IST
Last Updated 12 ನವೆಂಬರ್ 2025, 2:52 IST
ಮೈಸೂರು ಜಿಲ್ಲಾ ಉಸ್ತೂವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠದ ಆವರಣದಲ್ಲಿ ಚನ್ನಬಸವ ಸ್ವಾಮೀಜಿ ಪಾರ್ಥಿವ ಶರೀರದ ದರ್ಶನ ಪಡೆದರು
ಮೈಸೂರು ಜಿಲ್ಲಾ ಉಸ್ತೂವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠದ ಆವರಣದಲ್ಲಿ ಚನ್ನಬಸವ ಸ್ವಾಮೀಜಿ ಪಾರ್ಥಿವ ಶರೀರದ ದರ್ಶನ ಪಡೆದರು    

ನಂಜನಗೂಡು: ತಾಲ್ಲೂಕಿನ ಮಲ್ಲನಮೂಲೆ ಗುರು ಕಂಬಳೀಶ್ವರ ಮಠಾಧ್ಯಕ್ಷ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಗುರು ಕಂಬಳೀಶ್ವರರ ಗದ್ದುಗೆ ಆವರಣದಲ್ಲಿ ಮಂಗಳವಾರ ಸಂಜೆ ನೆರವೇರಿತು.

ಲಿಂಗೈಕ್ಯ ಸ್ವಾಮೀಜಿಯ ಪಾರ್ಥಿವ ಶರೀರವನ್ನು ಮಠದ ಗದ್ದುಗೆ ಒಳಾವರಣದಲ್ಲಿ ಇರಿಸಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಅಪಾರ ಸಂಖ್ಯೆಯ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನೇತೃತ್ವದ ಅಧಿಕಾರಿಗಳ ತಂಡ ಹಾಜರಿದ್ದು, ಬಂದೋಬಸ್ತ್ ನೋಡಿಕೊಂಡಿತು.

ಬೆಳಿಗ್ಗೆಯಿಂದ ಸಂಜೆವರೆಗೂ ಮಠದ ಆವರಣದಲ್ಲಿ ಭಕ್ತರಿಗೆ ನಿರಂತರ ಪ್ರಸಾದ ವಿನಿಯೋಗ ಮಾಡಲಾಯಿತು. ತಾಲ್ಲೂಕಿನ ಬಸವನಪುರ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಜೆ ಚನ್ನಬಸವ ಸ್ವಾಮೀಜಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾರ್ಗದರ್ಶನದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲಾಯಿತು.

ADVERTISEMENT

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಸುನಿಲ್ ಬೋಸ್, ಶಾಸಕರಾದ ದರ್ಶನ್ ಧ್ರುವನಾರಾಯಣ, ಗಣೇಶ್ ಪ್ರಸಾದ್, ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರಾದ ಬಿ. ಹರ್ಷವರ್ಧನ್, ಕಳಲೆ ಕೇಶವಮೂರ್ತಿ ಮತ್ತಿತರ ಗಣ್ಯರು ಸ್ವಾಮೀಜಿಯ ಅಂತಿಮ ದರ್ಶನ ಪಡೆದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.