ಬೆಂಗಳೂರು: ಗ್ರೀನ್ ಬಡ್ಸ್ ಆಗ್ರೋ ಫಾರ್ಮ್ಸ್ ಲಿಮಿಟೆಡ್ ಕಂಪನಿ ಮತ್ತು ಅದರ ನಿರ್ದೇಶಕರ ವಿರುದ್ಧದ ಪ್ರಕರಣದ ಎಲ್ಲ ಆರೋಪಿಗಳನ್ನು ಬಿಡುಗಡೆ ಮಾಡುವ ಮೈಸೂರು ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಹೂಡಿಕೆದಾರರಿಗೆ ₹13 ಕೋಟಿಯಷ್ಟು ವಂಚನೆಯಾಗಿದೆ ಎಂದು ಆರೋಪಿಸಿ ಮೈಸೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ, ಸಾಮಾನ್ಯ ಆರೋಪಪಟ್ಟಿ ಸಲ್ಲಿಸಿತ್ತು. ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ಕೆಪಿಐಡಿ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಇನ್ಸ್ಪೆಕ್ಟರ್ ಸಮರ್ಥ ಅಧಿಕಾರಿ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ, ಆರೋಪಿಗಳನ್ನು ಬಿಡುಗಡೆ ಮಾಡಿತ್ತು.
ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅನುಮತಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ‘ಆರೋಪ ಪಟ್ಟಿ ನಿರಾಕರಿಸಿರುವುದು ಸರಿ ಇದ್ದರೂ, ಆರೋಪಿಗಳ ಬಿಡುಗಡೆಗೆ ಆದೇಶ ಮಾಡಿರುವುದರಲ್ಲಿ ದೋಷ ಇದೆ. ವಿವಿಧ ದೂರುಗಳನ್ನು ಆಧರಿಸಿ ಒಂದೇ ಸಾಮಾನ್ಯ ಆರೋಪ ಪಟ್ಟಿ ಸಲ್ಲಿಸಲು ಸಿಐಡಿ ಪೊಲೀಸರಿಗೆ ಅಧಿಕಾರ ಇಲ್ಲ. ವೈಯಕ್ತಿಕ ದೂರುಗಳ ಮೇಲೆ ದಾಖಲಿಸಲಾದ ಪ್ರತಿಯೊಂದು ಅಪರಾಧದ ವಿರುದ್ಧ ಪ್ರತ್ಯೇಕ ಆರೋಪಪಟ್ಟಿ ಸಲ್ಲಿಸಬಹುದು’ ಎಂದು ತಿಳಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.