
ಹುಣಸೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವಂತೆ ನಗರದ ಚಿಕ್ಕಹುಣಸೂರು ಬಡಾವಣೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಜಾಗೃತಿ ಆಂದೋಲನ ಹಮ್ಮಿಕೊಂಡು ಗಮನ ಸೆಳೆದರು.
ವಿದ್ಯಾರ್ಥಿಗಳು ಪ್ರಮುಖ ರಸ್ತೆಗಳಲ್ಲಿ ಎತ್ತಿನಗಾಡಿಯಲ್ಲಿ ಸಾಗಿ ದಾಖಲಾತಿ ಕುರಿತಂತೆ ಪ್ರಚಾರ ನಡೆಸಿದರು. ಕಂಸಾಳೆ, ಪೂಜಾ ಕುಣಿತ ಒಳಗೊಂಡಂತೆ ವಿವಿಧ ಜಾನಪದ ನೃತ್ಯವನ್ನು ಪ್ರದರ್ಶಿಸಿ ಸಾರ್ವಜನಿಕರ ಗಮನ ಸೆಳೆದರು.
ಮುಖ್ಯ ಶಿಕ್ಷಕ ಕರಿಯಪ್ಪ ಮಾತನಾಡಿ, ‘ಸರ್ಕಾರಿ ಶಾಲೆಗಳತ್ತ ಪೋಷಕರ ಗಮನ ಸೆಳೆಯುವ ಅಗತ್ಯವಿದ್ದು, ಖಾಸಗಿ ಶಾಲೆಗಳ ಸ್ಪರ್ಧೆಯಲ್ಲಿ ಸರ್ಕಾರಿ ಶಾಲೆಗಳು ಉಳಿಯಬೇಕಾಗಿದೆ. ನಮ್ಮಲ್ಲೂ ಉತ್ತಮ ಗುಣಮಟ್ಟದ ಶಿಕ್ಷಕರಿದ್ದು, ಬೋಧನೆ ಹಾಗೂ ಕಲಿಕಾ ಪ್ರಮಾಣ ಉತ್ತಮವಾಗಿದೆ. ಸರ್ಕಾರ ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಪಠ್ಯ ಪುಸ್ತಕ ಸೇರಿದಂತೆ ಹಲವು ಪೌಷ್ಟಿಕ ಆಹಾರ ಉಚಿತವಾಗಿ ನೀಡಿ ಮಗುವಿನ ಕಲಿಕೆಗೆ ಅಗತ್ಯವಾಗುವ ಎಲ್ಲವನ್ನು ನೀಡುತ್ತಿದೆ’ ಎಂದರು.
‘ಪೋಷಕರು ಸತ್ಯವನ್ನು ಅರಿತು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗುತ್ತಿದ್ದು, ಇದನ್ನು ಮತ್ತಷ್ಟು ಪುಷ್ಟೀಕರಿಸಬೇಕಾದ ಜವಾಬ್ದಾರಿ ಶಿಕ್ಷಕರ ಹೆಗಲಿಗಿದೆ. ಮಕ್ಕಳನ್ನು ಬಳಸಿಕೊಂಡು ಪ್ರಚಾರದಲ್ಲಿ ತೊಡಗಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.