ADVERTISEMENT

ಮೈಸೂರು: ಎರಡನೇ ದಿನವೂ ನಗರದಲ್ಲಿ ಸಿಎಂ ಸಿದ್ದರಾಮಯ್ಯ ಸಂಚಾರ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 4:20 IST
Last Updated 8 ಆಗಸ್ಟ್ 2024, 4:20 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಬುಧವಾರ ಮನವಿ ಸ್ವೀಕರಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಬುಧವಾರ ಮನವಿ ಸ್ವೀಕರಿಸಿದರು   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ 2ನೇ ದಿನವಾದ ಬುಧವಾರವೂ ವಿವಿಧೆಡೆ ಸಂಚರಿಸಿದರು.

ನಗರಕ್ಕೆ ಮಂಗಳವಾರ ಬಂದು ಟಿ.ಕೆ. ಲೇಔಟ್‌ನ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಅವರು, ಬುಧವಾರ ಬೆಳಿಗ್ಗೆ ಬಂದಿದ್ದ ಸಾರ್ವಜನಿಕರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದರು. ತಿ.ನರಸೀಪುರ, ವರುಣ, ಚಾಮುಂಡೇಶ್ವರಿ, ಎಚ್.ಡಿ.ಕೋಟೆ, ಚಾಮರಾಜ ಕ್ಷೇತ್ರಗಳ ನಾಗರಿಕರು ಆಶ್ರಯ ಮನೆ, ಪಿಂಚಣಿ, ಚಿಕಿತ್ಸೆಗೆ ನೆರವು, ಕಾಲೇಜುಗಳಿಗೆ ಪ್ರವೇಶಾತಿ, ವಿದ್ಯಾರ್ಥಿನಿಲಯಗಳ ಸೀಟು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅರ್ಜಿ ಸಲ್ಲಿಸಿದರು.

ನಂತರ, ಬಿಜೆಪಿ–ಜೆಡಿಎಸ್‌ ಸರ್ಕಾರಗಳ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಮಹಾರಾಜ ಕಾಲೇಜು ಮೈದಾನದಲ್ಲಿ ಆ.9ರಂದು ಹಮ್ಮಿಕೊಂಡಿರುವ ಕಾಂಗ್ರೆಸ್ ಜನಾಂದೋಲನ ಸಮಾವೇಶದ ವೇದಿಕೆ ಸಿದ್ಧತೆಯನ್ನು ಅವರು ಪರಿಶೀಲಿಸಿದರು.

ADVERTISEMENT

ವೇದಿಕೆ, ಆಸನದ ವ್ಯವಸ್ಥೆ, ಆಗಮನ–ನಿರ್ಗಮನಕ್ಕೆ ಮಾಡಿರುವ ವ್ಯವಸ್ಥೆ ಮೊದಲಾದವುಗಳ ಮಾಹಿತಿ ಪಡೆದರು. ಆಸನಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸಮರ್ಪಕ ಧ್ವನಿವರ್ಧಕದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಕೆ.ಹರೀಶ್‌ಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮುಡಾ ಅಧ್ಯಕ್ಷ ಕೆ.ಮರೀಗೌಡ, ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್, ನಗರ ಜಿಲ್ಲಾ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ, ಎಚ್.ಎ.ವೆಂಕಟೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಐಜಿಪಿ ಡಾ.ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್.ವಿಷ್ಣುವರ್ಧನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.