
ಹುಣಸೂರು: ರಾಜ್ಯ ಸರ್ಕಾರ ತಂಬಾಕು ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊಸೂರು ಕುಮಾರ್ ಮತ್ತು ತಂಬಾಕು ಬೆಳೆಗಾರರ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೇಳೆ ಅವರು ಮೇಲಿನಂತೆ ಭರವಸೆ ನೀಡಿ, ‘ಕೇಂದ್ರ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ ದರ ಸಮರಕ್ಕೆ ತಾತ್ವಿಕ ಅಂತ್ಯ ಹಾಡಲಾಗುವುದು. ರೈತರ ರಕ್ಷಣೆಗೆ ಸರ್ಕಾರ ಕಟಿಬದ್ಧವಾಗಿದೆ’ ಎಂದಿದ್ದಾರೆ ಎಂದು ಹೊಸೂರು ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ರಾಜ್ಯದ ಹಳೆ ಮೈಸೂರು ಭಾಗದ ರೈತರ ವಾಣಿಜ್ಯ ಬೆಳೆ ತಂಬಾಕಿಗೆ ದರ ಈ ಸಾಲಿನಲ್ಲಿ ಸತತವಾಗಿ ಕುಸಿತ ಕಂಡು ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ವೈಜ್ಞಾನಿಕ ದರ ನಿಗದಿಗೊಳಿಸಲು ಒತ್ತಡ ಹಾಕಬೇಕು’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
‘ಪ್ರತಿ ವರ್ಷವೂ ತಂಬಾಕು ಹರಾಜು ಮಾರುಕಟ್ಟೆ ಆರಂಭವಾಗುತ್ತಿದ್ದಂತೆ ತಂಬಾಕು ಖರೀದಿಸುವ ಖಾಸಗಿ ಕಂಪನಿಗಳು ಬೆಳೆಗಾರರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವ ಪ್ರಯತ್ನ ನಡೆಸಿ ದರ ಏರುಪೇರು ಮಾಡುವುದು ಇಲ್ಲವೇ ಇತರೆ ಅಡ್ಡ ಮಾರ್ಗ ಹಿಡಿದು ಮಾರುಕಟ್ಟೆ ಸ್ವರೂಪವನ್ನೇ ಬದಲಿಸುವ ಕೆಲಸ ಮಾಡುತ್ತಿದ್ದು, ಇದರಿಂದಾಗಿ ಬೆಳೆಗಾರರ ಸಂಪೂರ್ಣ ಹಳ್ಳ ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.