
ಪಿರಿಯಾಪಟ್ಟಣ: ಚುನಾವಣಾ ಆಯೋಗವನ್ನು ಎಚ್ಚರಿಸಲು ಕಾಂಗ್ರೆಸ್ ಪಕ್ಷದಿಂದ ‘ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ’ ನಡೆಸಲಾಗುತ್ತಿದೆ ಎಂದು ಸಚಿವ ಕೆ. ವೆಂಕಟೇಶ್ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಘಟಕಗಳು ಭಾನುವಾರ ಏರ್ಪಡಿಸಲಾಗಿದ್ದ ಸಹಿ ಸಂಗ್ರಹ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಮತಗಳವು ನಡೆಯುತ್ತಿರುವುದನ್ನು ತಡೆಯುಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಎಂದರು.
ರಾಜ್ಯದಲ್ಲಿ ನಡೆಯಲಿರುವ ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರದ ಬದಲು ಮತಪತ್ರಗಳನ್ನು ಉಪಯೋಗಿಸುವಂತೆ ಸಚಿವ ಸಂಪುಟ ನಿರ್ಣಯ ಕೈಗೊಂಡು ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದೆ ಎಂದರು. ಈ ಅಭಿಯಾನ ಯಶಸ್ವಿಯಾಗಲು ಕಾರ್ಯಕರ್ತರು ಸಹಕರಿಸಬೇಕು ಎಂದು ತಿಳಿಸಿದರು.
ಮೈಲಾಕ್ ಅಧ್ಯಕ್ಷ ಎಚ್. ಡಿ. ಗಣೇಶ್ ಮಾತನಾಡಿ, ಬಿಜೆಪಿ ಮತಗಳವಿನ ಮೂಲಕ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ದುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ಮಾತನಾಡಿ, ‘ಪ್ರತಿ ಜಿಲ್ಲೆಯಲ್ಲೂ 2 ಲಕ್ಷ ಸಹಿಸಂಗ್ರಹದ ಗುರಿಯನ್ನು ಕೆಪಿಸಿಸಿ ನೀಡಿದ್ದು, ತಾಲೂಕಿನಲ್ಲಿ ಕನಿಷ್ಠ 10 ಸಾವಿರ ಸಹಿ ಸಂಗ್ರಹಿಸಬೇಕಿದೆ. ಕಾರ್ಯಕರ್ತರು ಅಭಿಯಾನವನ್ನು ಯಶಸ್ವಿ ಮಾಡಬೇಕು’ ಎಂದು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ಟಿ. ಸ್ವಾಮಿ, ರಹಮತ್ ಜಾನ್ ಬಾಬು, ಮಾಜಿ ಅಧ್ಯಕ್ಷ ಮಾನ್ಸೂನ್ ಚಂದ್ರು, ನಗರ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಗೌಡ, ಮೈಮುಲ್ ನಿರ್ದೇಶಕ ಪ್ರಕಾಶ್ , ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.