ಮೈಸೂರು: ಸಚಿವ ಸಾ.ರಾ.ಮಹೇಶ್ ಅವರ ಕಾರನ್ನು ತಡೆದ ಕಾನ್ಸ್ಟೆಬಲ್ ವೆಂಕಟೇಶ್ ಅವರ ಅಮಾನತು ಕ್ರಮದ ಕುರಿತು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಶುಕ್ರವಾರ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ.
ಈ ಕುರಿತು ಎರಡು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಆಯೋಗ ಜಿಲ್ಲಾಧಿಕಾರಿ ಅವರನ್ನು ಕೇಳಿತ್ತು. ವರದಿ ಕೇಳುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಒಂದೇ ದಿನದಲ್ಲಿ ಅಮಾನತು ಆದೇಶವನ್ನು ರದ್ದುಪಡಿಸಿತ್ತು.
ಈ ಎಲ್ಲ ಬೆಳವಣಿಗೆಗಳ ಸಂಬಂಧ ಜಿಲ್ಲಾಧಿಕಾರಿ ಅವರು ಗುರುವಾರ ಸಂಜೆ ತಮ್ಮ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ವೇಳೆ ಅಮಾನತು ವಿಷಯವನ್ನು ತಮ್ಮ ಗಮನಕ್ಕೆ ತಾರದಿರುವ ಕುರಿತು ಅವರು ಅಸಮಾಧಾನ ಹೊರ ಹಾಕಿದ್ದರು ಎನ್ನಲಾಗಿದೆ. ಅರ್ಧ ನಿಮಿಷಗಳಷ್ಟು ಕಾಲ ಸಚಿವರೊಬ್ಬರ ಕಾರನ್ನು ತಡೆದ ಕಾರಣಕ್ಕೆ ಅಮಾನತಿನಂತಹ ಶಿಕ್ಷೆ ಎಷ್ಟು ಸರಿ? ಸಚಿವರು ಮೌಖಿಕವಾಗಿ ಹೇಳಿದ್ದನ್ನು ಚುನಾವಣಾ ಸಂದರ್ಭದಲ್ಲಿ ಅನುಸರಿಸುವುದು ಎಷ್ಟು ಉಚಿತ? ಎಂದೆಲ್ಲ ತರಾಟೆಗೆ ತೆಗೆದುಕೊಂಡಿದ್ದರು ಎಂದು ಹೇಳಲಾಗಿದೆ.
ಸದ್ಯ, ಜಿಲ್ಲಾಧಿಕಾರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಕರಣ ಸಂಬಂಧ ಸಮಗ್ರ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ಏನಿದೆ ಎಂಬುದು ಬಹಿರಂಗವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.