ಮೈಸೂರು: ಇಲ್ಲಿನ ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ಕಚೇರಿಯು 18ರಿಂದ 44 ವರ್ಷದಗೊಳಗಿನ ಸಿಬ್ಬಂದಿಗೆ ಅವರು ಕೆಲಸ ಮಾಡುವ ಸ್ಥಳದಲ್ಲೇ ಕೋವಿಡ್ ಲಸಿಕೆ ಹಾಕುವ ಅಭಿಯಾನ ಆರಂಭಿಸಿದೆ.
ಈವರೆಗೆ ಶೇ 79ರಷ್ಟು ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಉಳಿದ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲೇ ಲಸಿಕೆ ಹಾಕಲು ನಿರ್ಧರಿಸಲಾಗಿದೆ.
ಸುಮಾರು 2 ಸಾವಿರ ಸಿಬ್ಬಂದಿ ಹೊಂದಿರುವ ಅಶೋಕಪುರಂ ಕಾರ್ಯಾಗಾರದಲ್ಲಿಯೂ ಕೆಲಸದ ಸ್ಥಳದಲ್ಲೇ ಸಿಬ್ಬಂದಿಗೆ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ಇಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 576 ಉದ್ಯೋಗಿಗಳ ಪೈಕಿ 550ಕ್ಕೂ ಹೆಚ್ಚು ಜನರು ಲಸಿಕೆ ಪಡೆದಿದ್ದಾರೆ.
ಸಿಬ್ಬಂದಿಯ ಅನುಕೂಲಕ್ಕಾಗಿ ಚಿಕ್ಕಜಾಜೂರು ಮತ್ತು ಹರಿಹರ ರೈಲ್ವೆ ನಿಲ್ದಾಣಗಳಲ್ಲಿ ಸಹ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ.
‘ಕೋವಿಡ್ 2ನೇ ಅಲೆ ಇನ್ನೂ ಮುಗಿದಿಲ್ಲ. ಹಾಗಾಗಿ ಯಾರೂ ನಿರ್ಲಕ್ಷ್ಯ ವಹಿಸಬಾರದು’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ತಿಳಿಸಿದ್ದಾರೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ.ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.