ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಕಾರ್ಯಕರ್ತರು ಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದರೆ, ಇದನ್ನು ಸಹಿಸಲಾಗದ ಬಲಪಂಥೀಯರು ಬಂಟ್ವಾಳ ತಾಲ್ಲೂಕಿನ ಸಿಪಿಐ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಿ ಶಿಕ್ಷೆ ವಿಧಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.
ಸಿಪಿಐ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ ಮಾತನಾಡಿ, ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ಗೌರವಿಸದೇ ಇರುವುದು ನಾಗರಿಕತೆಯಲ್ಲ. ಇದು ದೇಶದಲ್ಲಿ ಅಸಹನೆ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಸಿಪಿಐ ಸಹ ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ, ಖಜಾಂಚಿ ಬಸವರಾಜು, ಕೆ.ಜಿ.ಸೋಮರಾಜೇ ಅರಸ್, ಡಿ.ಜಗನ್ನಾಥ್, ಕೆ.ಎಸ್.ರೇವಣ್ಣ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.