ADVERTISEMENT

ಪಕ್ಷದ ನಿಯಮ ಉಲ್ಲಂಘಿಸಿದ್ದಲ್ಲಿ ಶಿಸ್ತುಕ್ರಮ

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಮೇ 2019, 20:18 IST
Last Updated 4 ಮೇ 2019, 20:18 IST
ಅಡಗೂರು ಎಚ್. ವಿಶ್ವನಾಥ್
ಅಡಗೂರು ಎಚ್. ವಿಶ್ವನಾಥ್   

ಹುಣಸೂರು: ತಾ.ಪಂ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಸೂಚನೆ ಉಲ್ಲಂಘಿಸಿರುವವರ ವಿರುದ್ಧ ತಾಲ್ಲೂಕು ಘಟಕದ ಅಧ್ಯಕ್ಷರ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಅಡಗೂರು ಎಚ್. ವಿಶ್ವನಾಥ್ ತಿಳಿಸಿದರು.

ತಾ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಸದಸ್ಯನನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿತ್ತು. ಅದಕ್ಕೆ ಅಗತ್ಯ ಸಿದ್ದತೆಗಳೂ ನಡೆದಿತ್ತು. ಈ ಮಧ್ಯೆ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಂದ್ರ ಅವರ

ಕುಮ್ಮಕ್ಕಿನಿಂದ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಸದಸ್ಯನಿಗೆ ಸ್ಥಾನ ಕೈ ತಪ್ಪಿದೆ ಎಂದು ಶನಿವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ದೂರಿದರು.

ADVERTISEMENT

ಲೋಕಸಭೆ ಚುನಾವಣೆಗೆ ಸೀಮಿತಗೊಂಡಂತೆ ಮೈತ್ರಿ ತತ್ವ ಸೀಮಿತವಾಗಿತ್ತು. ಆದರೆ, ಸ್ಥಳೀಯ ಚುನಾವಣೆಗಳಿಗೆ ಈ ತತ್ವ ಅನ್ವಿಯಿಸುವುದಿಲ್ಲ. ಈ ಬಗ್ಗೆ ಕಾರ್ಯಕರ್ತರಿಗೆ ಅರಿವು ಮೂಡಿಸಲಾಗಿದೆ ಎಂದರು.

ತಾ.ಪಂ ಉಪಾಧ್ಯಕ್ಷರ ಚುನಾವಣೆಯಲ್ಲಿ ನಡೆದ ಅನೈತಿಕ ರಾಜಕಾರಣದಿಂದ ಪಕ್ಷಕ್ಕೆ ಯಾವುದೇ ಧಕ್ಕೆ ಆಗಿಲ್ಲ. ಕಾಂಗ್ರೆಸ್ ಪಕ್ಷದವರು ಅಲ್ಪ ಸಂಖ್ಯಾತ ನಾಮದಾರಿ ಗೌಡ ಸಮುದಾಯಕ್ಕೆ ರಾಜಕೀಯ ಶಕ್ತಿ ತುಂಬಲು ದಾರಿ ತಪ್ಪಿಸಿ ವಾಮ ಮಾರ್ಗ ಅನುಸರಿಸಿ ಅನ್ಯಾಯ ಮಾಡಿದ್ದಾರೆ. ಈ ಬಗ್ಗೆ ಆ ಸಮುದಾಯ
ಭವಿಷ್ಯದಲ್ಲಿ ತಕ್ಕ ಪಾಠ ಕಲಿಸಲಿದೆ ಎಂದು ಉತ್ತರಿಸಿದರು.

ಈ ನಡುವೆ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿ, ‘ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮ ಹಾಗೂ ನಗರಸಭೆ ಬಡಾವಣೆಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಿಂಗರಮಾರನಹಳ್ಳಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ನಲ್ಲಿ ₹ 40 ಲಕ್ಷ ವೆಚ್ಚದಲ್ಲಿ 6 ಕಿ.ಮಿ. ಉದ್ದನೆಯ ಪೈಪ್‌ಲೈನ್ ವ್ಯವಸ್ಥೆ ಕಲ್ಪಿಸಿದ್ದು, ಸೂಳೆಕೆರೆ ಬಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈಚೆಗೆ ಕ್ಷೇತ್ರದಲ್ಲಿ ಮಳೆ ಹಾನಿಗೆ ತುತ್ತಾದ ರೈತರಿಗೆ ಮೇ 2ನೇ ವಾರದಲ್ಲಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶಿವಕುಮಾರ್‌, ಮಹಮದ್ ಪೀರ್‌, ಶಿವಶೇಖರ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಾದೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.