
ಮೈಸೂರು: ‘ಸಿದ್ದರಾಮಯ್ಯ ಅವರು ತಾವಾಗಿಯೇ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು’ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಸಂಸ್ಥಾಪಕ ರಾಜ್ಯ ಸಂಚಾಲಕ ದಿ.ಲಕ್ಷ್ಮೀನಾರಾಯಣ ನಾಗವಾರ ಅವರ ಪ್ರಥಮ ವರ್ಷದ ಸ್ಮರಣೆ ಅಂಗವಾಗಿ ನಗರದ ರೋಟರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ‘ಗುರಿಮುಟ್ಟದ ದಲಿತ ರಾಜಕಾರಣ ಮತ್ತು ಮುಂದಿನ ನಡೆ’ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
‘ಈಗಾಗಲೇ ಏಳು ವರ್ಷ ಪೂರೈಸಿ, ಡಿ.ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ದೀರ್ಘಾವಧಿ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರಿಂದ ನಾವು (ದಲಿತರು), ಅವಕಾಶದ ನಡೆಯನ್ನು ನಿರೀಕ್ಷಿಸುತ್ತಿದ್ದೇವೆ’ ಎಂದರು.
‘ದಲಿತರು ಸದಾ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಇದರಿಂದಾಗಿಯೇ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಈಗ ಅವರು ಸ್ಥಾನ ಬಿಟ್ಟುಕೊಟ್ಟರೆ ನಾವು ಅವರನ್ನು ಡಿ. ದೇವರಾಜ ಅರಸು ಅವರಿಗಿಂತಲೂ ಎತ್ತರದ ಸ್ಥಾನದಲ್ಲಿ ಕೂರಿಸುತ್ತೇವೆ. ಬಿಟ್ಟು ಕೊಡದಿದ್ದಲ್ಲಿ ದಲಿತರ ಮುಂದಿನ ನಡೆ ಸಿಎಂ ಕುರ್ಚಿ ಕಡೆಗೆ ಎಂಬ ಘೋಷಣೆಯೊಂದಿಗೆ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು’ ಎಂದು ತಿಳಿಸಿದರು.
‘ಇದರ ಭಾಗವಾಗಿ ಫೆಬ್ರುವರಿಯಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಸಮಾವೇಶ ನಡೆಸಲಿದೆ’ ಎಂದರು.
‘ಅಹಿಂದ ಹೆಸರು ಹೇಳಿಕೊಂಡು ಅಲ್ಪಸಂಖ್ಯಾತರು ಮತ್ತು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗದಂತೆ ನೋಡಿಕೊಂಡಿದ್ದಾರೆ. ಮತ ಹಾಕಲು ನಾವು ಬೇಕು, ಅಧಿಕಾರಕ್ಕೆ ಬೇಡವೇ?’ ಎಂದು ಕೇಳಿದರು.
ದಸಂಸ ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟದ ಸಂಚಾಲಕಿ ಜಾನಕಮ್ಮ ಲಕ್ಷ್ಮೀನಾರಾಯಣ ನಾಗವಾರ, ರಾಜ್ಯ ಕಾರ್ಯಕಾರಿ ಸಮಿತಿ ಸಂಚಾಲಕ ಜೀವನಹಳ್ಳಿ ವೆಂಕಟೇಶ್ ಮಾತನಾಡಿದರು. ಜಿಲ್ಲಾ ಸಂಚಾಲಕ ಭುಗತಗಳ್ಳಿ ಕೆ. ಮಣಿಯಯ್ಯ ಸ್ವಾಗತಿಸಿದರು. ವಿಭಾಗೀಯ ಸಂಚಾಲಕ ರಾಜಶೇಖರ ಕೋಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.