ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ನಡೆಯುವ ‘ಪ್ರಧಾನ ಕವಿಗೋಷ್ಠಿ’ಯ ಅಧ್ಯಕ್ಷತೆಗೆ ಪಂಪ ಪ್ರಶಸ್ತಿ ಪುರಸ್ಕೃತ ಸಿಪಿಕೆ ಅವರನ್ನು ಆಹ್ವಾನಿಸುವಂತೆ ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಉಪಸಮಿತಿಯ ಉಪ ವಿಶೇಷಾಧಿಕಾರಿ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದ್ದಾರೆ.
‘ನಗರದ ನಿವಾಸಿಯೂ, ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕರೂ ಆಗಿರುವ ಅವರಿಗೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಸ್ಥಾನ ದೊರೆತಿದೆ. ಆದರೆ, ತವರು ನೆಲದ ದಸರಾ ಪ್ರಧಾನ ಕವಿಗೋಷ್ಠಿಯ ಅಧ್ಯಕ್ಷತೆ ಸಿಕ್ಕಿಲ್ಲದಿರುವುದು ವಿಷಾದದ ಸಂಗತಿಯಾಗಿದೆ’ ಎಂದಿದ್ದಾರೆ.
‘ಕಾವ್ಯ, ಪ್ರಬಂಧ, ವಿಮರ್ಶೆ, ವಿಚಾರ, ಸಂಶೋಧನೆ, ಜಾನಪದ, ಅಂಕಣ, ಜೀವನ ಚರಿತ್ರೆ, ಸಂಪಾದನೆ, ಸಂಸ್ಕೃತ ಮತ್ತು ಇಂಗ್ಲಿಷ್ ಅನುವಾದ ಸೇರಿದಂತೆ ಸಾಹಿತ್ಯದ ಬಹುತೇಕ ಎಲ್ಲ ಪ್ರಾಕಾರಗಳಲ್ಲೂ 300ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಅವರು ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರ. ಅದನ್ನು ಪರಿಗಣಿಸಿ ಗೌರವ ತೋರಬೇಕು. ‘ಹಿತ್ತಲ್ಲ ಗಿಡ ಮದ್ದಲ್ಲ’ ಎಂಬಂತೆ ಉಪೇಕ್ಷಿಸುವುದು ಸರಿಯಲ್ಲ. ಅವರಿಗೆ ತವರಿನ ಗೌರವ ತೋರಬೇಕು’ ಎಂದು ಮನವಿ ಮಾಡಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಬಸವರಾಜು, ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.