ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹಾಗೂ ಸಾವಿನ ಪ್ರಮಾಣ ಹೆಚ್ಚುತ್ತಿರುವ ಕಾರಣ ಈ ಬಾರಿ ದಸರಾ ಮಹೋತ್ಸವಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪ್ರವೇಶ ನೀಡಬಾರದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಶಿಫಾರಸು ಮಾಡಿದೆ.
‘ಅ.17ರಂದು ದಸರಾ ಉದ್ಘಾಟನೆಗೆ 200 ಹಾಗೂ ಅ.26ರಂದು ಜಂಬೂಸವಾರಿಗೆ 300 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಬೇಕು. ಗಣ್ಯರು, ಸಿಬ್ಬಂದಿ, ಕಲಾವಿದರು ಹಾಗೂ ಭದ್ರತಾ ಸಿಬ್ಬಂದಿ ಕೂಡ ಈ ಸಂಖ್ಯೆಯಲ್ಲಿ ಸೇರಿದ್ದಾರೆ. ಸಾರ್ವಜನಿಕರಿಗೆವರ್ಚುವಲ್ ಆಗಿ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು’ ಎಂದು ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ನೇತೃತ್ವದ ಮೂವರ ಸದಸ್ಯರ ಸಮಿತಿಯುತನ್ನವರದಿಯಲ್ಲಿ ನಮೂದಿಸಿದೆ.
ಅಲ್ಲದೇ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಅ.14ರ ನಂತರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿರುವ ವರದಿ ನೀಡಬೇಕು ಎಂದು ಸಲಹೆ ನೀಡಿದೆ.
ದಸರೆ ವೇಳೆ ನಿತ್ಯ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೇವಲ 50 ಮಂದಿಗೆ ಅವಕಾಶ ನೀಡಬೇಕು. ಸ್ಥಳೀಯ ಕಲಾವಿದರಿಗೆ ಮಾತ್ರ ಅವಕಾಶ ನೀಡಿ, ಕಾರ್ಯಕ್ರಮವನ್ನು 2 ಗಂಟೆಗೆ ಸೀಮಿತಗೊಳಿಸಬೇಕು ಎಂದು ಹೇಳಿದೆ.
ದಸರೆ ಆಚರಣೆ ಸಂದರ್ಭದಲ್ಲಿ ಸೋಂಕು ಹರಡದಂತೆ ಮುಂಜಾಗ್ರತೆ, ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಮಿತಿ ಅಂಬಾವಿಲಾಸ ಅರಮನೆ ಹಾಗೂ ಚಾಮುಂಡಿಬೆಟ್ಟಕ್ಕೆಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿತು. ಸಮಿತಿ ಸದಸ್ಯ ಡಾ.ಲೋಕೇಶ್, ಸದಸ್ಯ ಕಾರ್ಯದರ್ಶಿ ಡಾ.ಮಹಮ್ಮದ್ ಷರೀಫ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.