ADVERTISEMENT

ನಂಜನಗೂಡು: ಹುರಾ ಏತ ನೀರಾವರಿ ಕಾಮಗಾರಿ ವಿಳಂಬ– ಆಕ್ರೋಶ

ನೀರಾವರಿ ಇಲಾಖೆ ಕಚೇರಿ ಮುಂಭಾಗ ಭಾರತೀಯ ಕಿಸಾನ್ ಸಂಘಟನೆ ಕಾರ್ಯಕರ್ತರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 5:47 IST
Last Updated 13 ಅಕ್ಟೋಬರ್ 2021, 5:47 IST
ನಂಜನಗೂಡಿನಲ್ಲಿ ಭಾರತೀಯ ಕಿಸಾನ್ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟಿಸಿದರು
ನಂಜನಗೂಡಿನಲ್ಲಿ ಭಾರತೀಯ ಕಿಸಾನ್ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟಿಸಿದರು   

ನಂಜನಗೂಡು: ತಾಲ್ಲೂಕಿನ ಹುರಾ ಭಾಗದ 26 ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಯನ್ನು ಪೂರ್ಣಗೊಳಿಸು ವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘಟನೆ ಕಾರ್ಯಕರ್ತರು ನೀರಾವರಿ ಇಲಾಖೆ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಚಿಂತಾಮಣಿ ಗಣಪತಿ ದೇವಾಲಯ ಮುಂಭಾಗದಿಂದ ನೀರಾವರಿ ಇಲಾಖೆ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಅಧಿಕಾರಿಗಳವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘಟನೆಯ ಚೆನ್ನಪ್ಪ ಮಾತನಾಡಿ, ‘ಹುರಾ ಭಾಗದ 26 ಕೆರೆಗಳಿಗೆ ಏತನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಗೆ 2017ರಲ್ಲಿ ಕೋಟ್ಯಂತರ ರೂಪಾಯಿ ಬಿಡುಗಡೆಗೊಂಡಿದೆ. ಅಧಿಕಾರಿಗಳು ಗುತ್ತಿಗೆದಾರ
ರೊಂದಿಗೆ ಒಳ ಒಪ್ಪಂದ ಮಾಡಿ ಕೊಂಡು ಕಾಮಗಾರಿ ಪೂರ್ಣ ಗೊಳಿಸಿಲ್ಲ. ಕಾಮಗಾರಿ ಪೂರ್ಣಗೊಳ್ಳ ದಿರುವುದರಿಂದ ಈ ಭಾಗದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರಿತಪಿಸುವಂತಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಶೇ 90ರಷ್ಟು ಕಾಮಗಾರಿ ಪೂರ್ಣಗೊಳಿಸಿರುವುದಾಗಿ ಸುಳ್ಳು ಹೇಳುತ್ತಾರೆ. ಕಣೇನೂರು ಗ್ರಾಮದ ಏತ ನೀರಾವರಿ ಯೋಜನೆಯ ಕಾಮಗಾರಿ ಇನ್ನೂ ಪಿಲ್ಲರ್ ಹಂತದಲ್ಲೇ ಇದೆ. ಚಾವಣಿಯನ್ನೂ ಹಾಕಿಸದೆ ಗುತ್ತಿಗೆದಾರರಿಗೆ ಅಧಿಕಾರಿಗಳು ಬಿಲ್ ಮಾಡಿಕೊಟ್ಟಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಈ ಕೂಡಲೇ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಕರೆಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಬೇಕು. ಕಾಮಗಾರಿ ನಡೆಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ನೀಡಲಾಗಿರುವ ಬಿಲ್‍ನ ಮೊತ್ತವನ್ನು ವಸೂಲಿ ಮಾಡಬೇಕು. ಕ್ರಮವಹಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿ ಕೊಳ್ಳುತ್ತೇವೆ’ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘಟನೆಯ ಮುಖಂಡರಾದ ನಾರಾಯಣಸ್ವಾಮಿ, ಗುರುಪ್ರಸಾದ್, ರವಿ, ಗಿರೀಶ್, ಪ್ರಭು, ಬಸವರಾಜಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.