ADVERTISEMENT

ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 15:05 IST
Last Updated 7 ಜೂನ್ 2021, 15:05 IST
ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ತನ್ನ ವಶಕ್ಕೆ ಪಡೆದು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿ  ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು
ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ತನ್ನ ವಶಕ್ಕೆ ಪಡೆದು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿ  ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು   

ಮೈಸೂರು: ತುರ್ತು ಆರೋಗ್ಯ ಸ್ಥಿತಿ ಎಂದು ಘೋಷಿಸಿ ಎಲ್ಲ ಖಾಸಗಿ ಆಸ್ಪತ್ರೆಗಳು, ಔಷಧ ತಯಾರಿಕಾ ಘಟಕಗಳು ಹಾಗೂ ಪ್ರಯೋಗಾಲಯಗಳನ್ನು ಸರ್ಕಾರ ತನ್ನ ವಶಕ್ಕೆ ಪಡೆದು ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಒತ್ತಾಯಿಸಿದರು.

ಲಾಕ್‌ಡೌನ್‌ ವಿಸ್ತರಣೆಯಿಂದ ಸಂಕಷ್ಟಕ್ಕೀಡಾಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ₹ 5 ಸಾವಿರ ಹಣ ನೀಡಬೇಕು, ಆರೋಗ್ಯ ಇಲಾಖೆಯಲ್ಲಿ ಕಾಯಂ ನೌಕರರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಅವರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಪ್ರತಿ ಪಂಚಾಯಿತಿ ಮಟ್ಟದಲ್ಲಿ ಶಾಲೆ, ಸಮುದಾಯಭವನ, ಕಲ್ಯಾಣಮಂಟಪಗಳಲ್ಲಿ ಕನಿಷ್ಠ ಒಂದು ವರ್ಷಗಳಷ್ಟು ಕಾಲ ಕೋವಿಡ್ ಚಿಕಿತ್ಸೆ ನೀಡಬೇಕು, ಎಲ್ಲ ಕೊರೊನಾ ವಾರಿಯರ್‌ಗಳಿಗೆ ಸಕಾಲಕ್ಕೆ ವೇತನ ಬಿಡುಗಡೆ ಮಾಡಬೇಕು ಹಾಗೂ ಅವರ ಸಂಭಾವನೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ADVERTISEMENT

‘ಡಿ’ ದರ್ಜೆಯ ಕೊರೊನಾ ವಾರಿಯರ್‌ಗಳು ಮೃತಪಟ್ಟರೆ ಅವರ ಕುಟುಂಬದ ಸದಸ್ಯರಿಗೆ ಕನಿಷ್ಠ ₹ 10 ಲಕ್ಷ ಪರಿಹಾರ ನೀಡಬೇಕು. ಇದಕ್ಕೂ ಮಿಗಿಲಾದ ಹುದ್ದೆಯಲ್ಲಿದ್ವವರು ಮೃತಪಟ್ಟರೆ ಹುದ್ದೆಗೆ ಅನುಗುಣವಾಗಿ ಅವರ ಕುಟುಂಬದ ಸದಸ್ಯರಿಗೆ ಹೆಚ್ಚು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ಕೆ.ವಿ.ದೇವೇಂದ್ರ ಹಾಗೂ ಇತರ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.