
ಕೆ.ಆರ್.ನಗರ: ತಾಲ್ಲೂಕಿನ ಲಾಲನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ₹25ಲಕ್ಷ, ಸಿದ್ದೇಶ್ವರ ಸ್ವಾಮಿ ದೇವಾಲಯದ ಕಾಂಪೌಂಡ್ ನಿರ್ಮಾಣಕ್ಕೆ ₹5 ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲ್ಲೂಕಿನ ಲಾಲನಹಳ್ಳಿ ಗ್ರಾಮದಲ್ಲಿ ಸಿದ್ದೇಶ್ವರಸ್ವಾಮಿ ದೇವಾಲಯದ ಕಾಂಪೌಂಡ್ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ತಂದು ಕೆಲಸ ಮಾಡಲು ಮುಂದಾದರೆ ಅದಕ್ಕೆ ವಿರೋಧ ಪಕ್ಷದವರು ಸಾಕಷ್ಟು ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಗ್ರಾಮದ ಅಭಿವೃದ್ಧಿ ಮಾಡುವುದು ನನ್ನ ಕರ್ತವ್ಯ, ಜವಾಬ್ದಾರಿ ಮತ್ತು ಹಕ್ಕಾಗಿದೆ. ಗ್ರಾಮದ ಅಭಿವೃದ್ಧಿಗೆ ಯಾರೂ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದರು.
2022-23ರಲ್ಲಿ ನಿಗದಿಯಾಗಿದ್ದಕ್ಕಿಂತ ಹೆಚ್ಚಿನ ಕಾಮಗಾರಿಗೆ ಅನುಮೋದನೆ ಪಡೆದಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್ಚಿನ ಕಾಮಗಾರಿಗೆ ದೊರೆತಿದ್ದ ಅನುಮೋದನೆಯನ್ನು ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ರದ್ದಾಗಿದ್ದ ಕಾಮಾಗಾರಿಗಳಿಗೆ ಬದಲಿ ಕಾಮಗಾರಿಗಳನ್ನಾಗಿ ಪರಿವರ್ತಿಸಿ ಅನುಮೋದನೆ ಪಡೆದು ಹಲವು ಕಾಮಗಾರಿ ಮಾಡಲಾಗುತ್ತಿದೆ ಎಂದರು.
2022-23ರಲ್ಲಿ ಅಂದಿನ ಶಾಸಕರು ಕಾಮಗಾರಿಗೆ ಅನುಮೋದನೆ ಪಡೆದಿದ್ದಲ್ಲಿ ಅಗ್ರಿಮೆಂಟ್, ಟೆಂಡರ್ ಕರೆದು ಕೆಲಸ ಪ್ರಾರಂಭಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ಥಗಿತಗೊಂಡ ಕೆಲಸ ಮುಂದುವರಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದರು.
ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ.ರಮೇಶ್ಕುಮಾರ್, ಮುಖಂಡ ಹಾಡ್ಯ ಮಹದೇವಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಸಮುದಾಯ ತಾಲ್ಲೂಕು ಘಟಕದ ಅಧ್ಯಕ್ಷ ಕೆಂಪರಾಜು, ಮುಖಂಡ ಎಲ್.ಪಿ.ರವಿಕುಮಾರ್ ಮಾತನಾಡಿದರು.
ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಮುಖಂಡರಾದ ಮಾರ್ಚಹಳ್ಳಿ ಶಿವರಾಮ್, ಸಿದ್ದಪ್ಪ, ಮೈಮುಲ್ ನಾಮ ನಿರ್ದೇಶಿತ ಸದಸ್ಯರಾದ ಮಲ್ಲಿಕಾ ರವಿಕುಮಾರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡ ಮಹೇಶ್, ಗ್ರಾ.ಪಂ.ಸದಸ್ಯರಾದ ಗುರು, ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಶಂಕರ್, ಎಂ.ಎಸ್.ಮಹದೇವ್, ನಗರ ಘಟಕದ ಅಧ್ಯಕ್ಷ ಎಂ.ಜೆ.ರಮೇಶ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ಮುಖಂಡರಾದ ಭೋಜರಾಜ್, ಗಿರೀಶ್, ಮನೋಜ್, ಜಯಣ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.