ADVERTISEMENT

‘ಹೃದಯಾಘಾತ; ಬೇಡ ಆತಂಕ’

ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 42 ಸಾವು; ಡಿಎಚ್‌ಒ ಮಾಹಿತಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 5:42 IST
Last Updated 9 ಜುಲೈ 2025, 5:42 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಮೈಸೂರು: ‘ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಜೂನ್‌ವರೆಗೆ 42 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಸದ್ಯ ಆತಂಕ ಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ ಮಾಹಿತಿ ನೀಡಿದರು.

ಮಂಗಳವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ‘ಹೃದಯಾಘಾತದಿಂದಾಗುವ ಸಾವಿನ ಪ್ರಮಾಣ ತಗ್ಗಿಸುವ ಸಲುವಾಗಿ ಸರ್ಕಾರವು ತಾಲ್ಲೂಕು ಆಸ್ಪತ್ರೆಗಳಲ್ಲಿಯೇ ಹೃದ್ರೋಗಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ಸ್ಟೆಮಿ ಯೋಜನೆ ಜಾರಿಗೆ ತಂದಿದೆ. ಈ ವರ್ಷದ ಜೂನ್‌ ಅಂತ್ಯಕ್ಕೆ ಜಿಲ್ಲೆಯಾದ್ಯಂತ 32,845 ಜನರಿಗೆ ಇಸಿಜಿ ತಪಾಸಣೆ ಮಾಡಲಾಗಿದ್ದು, 221 ಜನರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದೆ. ಇವರಲ್ಲಿ 176 ಜನರಿಗೆ ಚಿಕಿತ್ಸೆ ನೀಡಿದ ಬಳಿಕ ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ’ ಎಂದು ವಿವರಿಸಿದರು.

‘ಹೃದ್ರೋಗಿಗಳಿಗೆ ಜೀವ ರಕ್ಷಕವಾಗಿರುವ ಸ್ಟೆಮಿ ಯೋಜನೆ ಮೂಲಕ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಈವರೆಗೂ ಸುಮಾರು 13 ಲಕ್ಷ ಮಧುಮೇಹಿ ಹಾಗೂ ಅಧಿಕ ರಕ್ತದೊತ್ತಡ ರೋಗಿಗಳ ಪರೀಕ್ಷೆ ಮಾಡಲಾಗಿದೆ’ ಎಂದರು.

ADVERTISEMENT

ಡೆಂಗಿ ಪ್ರಕರಣಗಳು ಕಡಿಮೆ: ‘ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗಿ ಪ್ರಕರಣಗಳ ಸಂಖ್ಯೆಯು ಶೇ 70ರಷ್ಟು ಕಡಿಮೆ ಆಗಿದೆ. ಈಗಾಗಲೇ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ‘ಡ್ರೈ ಡೇ’ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಮನೆ ಮನೆಗೆ ತೆರಳಿ ಲಾರ್ವಾ ಸಂಗ್ರಹ ಮಾಡಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.