ಮೈಸೂರು: ಜಿಲ್ಲಾ ವಿಶ್ವಕರ್ಮ 7ನೇ ಜಯಂತ್ಯುತ್ಸವ ಸಮಿತಿಯಿಂದ ವಿಶ್ವಕರ್ಮ ಜಯಂತ್ಯುತ್ಸವವನ್ನು ಸೆ.17ರಂದು ಮಧ್ಯಾಹ್ನ 12.30ಕ್ಕೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಎಂ.ಮೊಗಣ್ಣಾಚಾರ್ ತಿಳಿಸಿದರು.
‘ಅಂದು ಬೆಳಿಗ್ಗೆ 9.30ಕ್ಕೆ ಇರ್ವಿನ್ ರಸ್ತೆಯ ಕಾಳಿಕಾಂಬಾ ಕಮಠೇಶ್ವರ ದೇವಾಲಯದಲ್ಲಿ ವಿಶ್ವಕರ್ಮ ಪುತ್ಥಳಿಗೆ ಪೂಜೆ ಸಲ್ಲಿಸಿ ಬೆಳ್ಳಿರಥದಲ್ಲಿ ಮೆರವಣಿಗೆ ನಡೆಸಲಾಗುವುದು. ಕಲಾ ತಂಡಗಳೊಂದಿಗೆ ಸಾಗುವ ಮೆರವಣಿಗೆಯು ಅಶೋಕ ರಸ್ತೆ–ಕೆ.ಆರ್.ವೃತ್ತ–ದೇವರಾಜ ಅರಸು ರಸ್ತೆ ಮಾರ್ಗವಾಗಿ ಕಲಾಮಂದಿರವನ್ನು ತಲುಪಲಿದೆ’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.
‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ವಿಶ್ವಕರ್ಮ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜನಪ್ರತಿನಿಧಿಗಳು ಮತ್ತು ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ವಿಶ್ವಕರ್ಮ ಸಮಾಜದ ಸಾಧಕರನ್ನು ಸನ್ಮಾನಿಸಲಾಗುವುದು. ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ವಿಶೇಷ ಉಪನ್ಯಾಸ ನೀಡಲಿದ್ದಾರೆ’ ಎಂದರು.
ಸಮಿತಿಯ ಪದಾಧಿಕಾರಿಗಳಾದ ಸೋಮಸುಂದರ ಮೂರ್ತಿ, ಜಯಶಂಕರ್, ಪ್ರಮೀಳಾ ಆಚಾರ್, ಸಿದ್ದಪ್ಪಚಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.