ಮೈಸೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಸೆ. 15ರಿಂದಲೇ ಭಾಗಶಃ ಮುಷ್ಕರಕ್ಕೆ ಕರೆ ನೀಡಿದೆ.
ಸರ್ಕಾರಕ್ಕೆ ಸಲ್ಲಿಸುತ್ತಿದ್ದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಕುರಿತ ವರದಿಯನ್ನು ಸಲ್ಲಿಸದೇ ಇರಲು ಸಂಘ ತೀರ್ಮಾನಿಸಿದೆ. ಜತೆಗೆ, ಸೆ. 21ರಿಂದ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಸಂಘದ ಜಿಲ್ಲಾಶಾಖೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ದೇವಿ ಆನಂದ್, ‘ವೈದ್ಯರ ವೇತನವನ್ನು ಹೆಚ್ಚಳ ಮಾಡಬೇಕು, 3 ವರ್ಷ ಸೇವೆ ಸಲ್ಲಿಸಿದ ಎಲ್ಲ ವೈದ್ಯರನ್ನು ಕಾಯಂಗೊಳಿಸಬೇಕು, ತಮಿಳುನಾಡು ರಾಜ್ಯದ ಮಾದರಿಯಂತೆ ದಿನಕ್ಕೆ 8 ಗಂಟೆ ಅವಧಿಯ ಪಾಳಿಯನ್ನು ಅಳವಡಿಸಬೇಕು’ ಎಂದು ಒತ್ತಾಯಿಸಿದರು.
ಸಂಘದ ರಾಜ್ಯಮಟ್ಟದ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕಳೆದ ತಿಂಗಳು 15ರಂದೇ ಈ ಕುರಿತ ವಿವರವಾದ ಮನವಿಪತ್ರ ನೀಡಲಾಗಿತ್ತು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಮುಷ್ಕರದಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.