ಮೈಸೂರು: ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಜಯರಾಮ್ ಗಂಭೀರ ಆಕ್ಷೇಪಗಳನ್ನು ಎತ್ತಿದ್ದು, ಮೈಸೂರು ಜಿಲ್ಲಾಧಿಕಾರಿಗೆ ಅಗತ್ಯ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ಗೆ ಪತ್ರ ಬರೆದಿದ್ದಾರೆ.
ಜಯರಾಮ್ ಮೇ 24ರಂದೇ ಪತ್ರ ಬರೆದಿದ್ದು, ಇದರಲ್ಲಿ ಜಿಲ್ಲಾಡಳಿತದ ಲೋಪವನ್ನು ತಿಳಿಸಿದ್ದಾರೆ. ಲಸಿಕೆ ಅಭಿಯಾನದ ಯಶಸ್ಸನ್ನು ಉಲ್ಲೇಖಿಸಿದ್ದಾರೆ.
‘ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿಯ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿಲ್ಲ. ಪ್ರತಿ ಹೋಬಳಿಗೊಂದು ಕೋವಿಡ್ ಆರೈಕೆ ಕೇಂದ್ರ ಆರಂಭಿಸುವಂತೆ ಜಿಲ್ಲಾಧಿಕಾರಿಗೆ ನೀಡಿದ್ದ ಸೂಚನೆಯನ್ನು ಪಾಲಿಸಿಲ್ಲ. ಆರಂಭಗೊಂಡಿದ್ದ ನಾಲ್ಕು ಕೇಂದ್ರಗಳಿಗೆ ಭೇಟಿ ನೀಡಿದ್ದಾಗ, ಎರಡು ಕೇಂದ್ರದಲ್ಲಿ ಅವ್ಯವಸ್ಥೆ ಕಂಡು ಬಂದಿತ್ತು’ ಎಂಬುದನ್ನು ಜಯರಾಮ್ ವಿವರಿಸಿದ್ದಾರೆ.
‘ಜಿಲ್ಲಾಧಿಕಾರಿ ನಡೆಸುವ ಸರಣಿ ಸಭೆಯಿಂದ ಅಧಿಕಾರಿಗಳು ಅರ್ಧ ದಿನವಷ್ಟೇ ಕೆಲಸ ಮಾಡುವಂತಾಗಿದೆ. ವಾರಕ್ಕೊಮ್ಮೆ ಸಭೆ ನಡೆಸುವಂತೆ ಸೂಚಿಸಿ. ವಾಸ್ತವ ಅರಿಯಲು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳೊಂದಿಗೆ ಎಲ್ಲೆಡೆ ಪ್ರವಾಸ ನಡೆಸುವಂತೆ ಆದೇಶಿಸಿ’ ಎಂದು ತಮ್ಮ ವರದಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.