ADVERTISEMENT

ಸ್ಯಾಂಟ್ರೊ ರವಿ ಬಂಧನಕ್ಕೆ ದಸಂಸ ಆಗ್ರಹ

ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾರ್ಯಕರ್ತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 12:53 IST
Last Updated 12 ಜನವರಿ 2023, 12:53 IST
ಸ್ಯಾಂಟ್ರೊ ರವಿ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪ ಗುರುವಾರ ಪ್ರತಿಭಟನೆ ನಡೆಸಿದರು
ಸ್ಯಾಂಟ್ರೊ ರವಿ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪ ಗುರುವಾರ ಪ್ರತಿಭಟನೆ ನಡೆಸಿದರು   

ಮೈಸೂರು: ‘ಸ್ಯಾಂಟ್ರೊ ರವಿ ಬಂಧಿಸದೇ ಅನೈತಿಕ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಮಾತನಾಡಿ, ‘ದಲಿತ ಸಮುದಾಯಕ್ಕೆ ಸಂತ್ರಸ್ತ ಯುವತಿ ವಿಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿ 12 ದಿನವಾದರೂ ಆರೋಪಿ ಸ್ಯಾಂಟ್ರೊ ರವಿ ಬಂಧನವಾಗಿಲ್ಲ. ಜನಸಾಮಾನ್ಯರಿಗೆ ಸರ್ಕಾರದಿಂದ ರಕ್ಷಣೆ ಇಲ್ಲವಾಗಿದೆ’ ಎಂದು ದೂರಿದರು.

ADVERTISEMENT

‘ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು. ಸ್ಯಾಂಟ್ರೊ ರವಿ ಜೊತೆ ಶಾಮೀಲಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಒಡನಾಡಿ’ ಸಂಸ್ಥಾಪಕ ಸ್ಟ್ಯಾನ್ಲಿ ಮಾತನಾಡಿ, ‘ರಾಜಧಾನಿಯಲ್ಲಿ ಭ್ರಷ್ಟ್ರ ವ್ಯವಸ್ಥೆಯನ್ನು ಗುರಿಯಾಗಿಟ್ಟುಕೊಂಡು ಎಲ್ಲ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಆಡಳಿತ ವ್ಯವಸ್ಥೆಯನ್ನೇ ಸ್ಯಾಂಟ್ರೊ ರವಿ ಆವರಿಸಿಕೊಂಡಿದ್ದು, ಯುವತಿಯರನ್ನು ಬಳಸಿಕೊಂಡು ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾನೆ. ಅನ್ಯಾಯ ಮಾರ್ಗದಲ್ಲಿ ಸಾಗಿರುವ ಪ್ರತಿಯೊಬ್ಬರ ಮೇಲೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು’ ಎಂದರು.

‘ತಪ್ಪು ಮಾಡಿದ ಅಧಿಕಾರಿಗಳು ಹಾಗೂ ಮುಖಂಡರು ಕಾನೂನಿನ ಚೌಕಟ್ಟಿಗೆ ಬರಬೇಕು. ಬಲವಾದ ಸಾಕ್ಷ್ಯಗಳು ಸಿಕ್ಕಿರುವಾಗ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಜನರಿಗೆ ಅನ್ಯಾಯವಾಗಲಿದೆ’ ಎಂದರು.

ದಸಂಸದ ಆಲಗೂಡು ಶಿವಕುಮಾರ್‌, ಮಣಿಯಯ್ಯ ಭುಗತಹಳ್ಳಿ, ಕಲ್ಲಹಳ್ಳಿ ಶಿವಕುಮಾರ್, ಮಂಜು ಶಂಕರಪುರ, ಮರಿಸ್ವಾಮಿ, ತಗಡೂರು ಬಸವರಾಜ್‌, ಪ್ರೊ.ಪಂಡಿತಾರಾಧ್ಯ, ರಾಜೇಶ್ವರಿ, ರತ್ನಮ್ಮ, ಶಿವಮ್ಮ, ಪ್ರಿಯಾ ಇದ್ದರು.

ಜಾಮೀನು ಅರ್ಜಿ ವಿಚಾರಣೆ ಜ.17ಕ್ಕೆ
ಮೈಸೂರು:
ಕೆ.ಎಸ್‌.ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೊ ರವಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಇಲ್ಲಿನ 6ನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜ.17ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.