ಮೈಸೂರು: ‘ಕಳೆದೆರಡು ತಿಂಗಳಿಂದ ಇ–ಖಾತೆ ಮಾಡಲಾಗುತ್ತಿಲ್ಲ. ಅದರಿಂದ ಜನರಿಗೆ ತೊಂದರೆಯಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಬಿಜೆಪಿ ಮುಖಂಡ ಮಾಜಿ ಮೇಯರ್ ಶಿವಕುಮಾರ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ವ್ಯವಸ್ಥೆಯನ್ನು ಉನ್ನತೀಕರಿಸುವ ಬದಲು ರಾಜ್ಯ ಸರ್ಕಾರವು 20 ವರ್ಷ ಹಿಂದಕ್ಕೆ ಕೊಂಡೊಯ್ದಿದೆ. ಸಾಧಕ– ಬಾಧಕ ಪರಿಶೀಲನೆ ನಡೆಸದೇ, ತರಾತುರಿಯಲ್ಲಿ ಅನುಷ್ಠಾನಗೊಳಿಸಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದರು.
‘ಎಲ್ಲ ಆಸ್ತಿಗಳ ದತ್ತಾಂಶ ಸಂಗ್ರಹ ಸಮಪರ್ಕವಾಗಿ ನಡೆದಿಲ್ಲ. ಇದೀಗ ತಾಂತ್ರಿಕ ದೋಷ ಉಂಟಾಗಿರುವುದರಿಂದ ಆಸ್ತಿ ಮಾರಾಟ ಮತ್ತು ಖರೀದಿ ಆಗುತ್ತಿಲ್ಲ. ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರುವಂತಾಗಿದೆ. ಪಾಲಿಕೆಗೆ ₹ 200 ಕೋಟಿ ಆಸ್ತಿ ತೆರಿಗೆ ಬರುತ್ತಿತ್ತು. ಜನರು ತೆರಿಗೆ ಪಾವತಿಸಲು ಆಗುತ್ತಿಲ್ಲ’ ಎಂದು ಹೇಳಿದರು.
‘ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರುತ್ತಾರೆ. ಅವರಿಗೆ ಇ– ಖಾತಾ ಅವ್ಯವಸ್ಥೆ ಸರಿಪಡಿಸಲು ಆಗುವುದಿಲ್ಲವೇ. ಪ್ರತಿಷ್ಠಿತ ಕಂಪನಿಗಳು ನೆರೆ ರಾಜ್ಯಗಳ ಪಾಲಾಗುತ್ತಿವೆ. ಉದ್ಯೋಗವಕಾಶ ಕೈ ತಪ್ಪುತ್ತಿದೆ’ ಎಂದರು.
ಮುಖಂಡರಾದ ಬಿ.ವಿ.ಮಂಜುನಾಥ್, ಸುಬ್ಬಯ್ಯ, ರಂಗಸ್ವಾಮಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.