ಮೈಸೂರು: ಚಾಮರಾಜ ಕ್ಷೇತ್ರದ ಕುಂಬಾರಕೊಪ್ಪಲಿನ ಸರ್ಕಾರಿ ಶಾಲೆ ಹಾಗೂ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶೈಕ್ಷಣಿಕ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಕೆ.ಹರೀಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಸಿಹಿ, ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಸ್ವಾಗತಿಸಿದರು.
ಬಳಿಕ ಮಾತನಾಡಿದ ಅವರು, ‘ಪ್ರಸ್ತುತ ಜಗತ್ತಿನಲ್ಲಿ ಶಿಕ್ಷಣವೇ ಶಕ್ತಿಯಾಗಿದ್ದು, ಶಿಕ್ಷಣದಲ್ಲಿ ಸಾಧನೆ ಮಾಡಿದಾತ ತನ್ನ ಜೀವನವನ್ನು ಉತ್ತಮವಾಗಿ ನಿರ್ವಹಿಸುತ್ತಾನೆ. ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಿ, ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು. ಪೋಷಕರು ಜವಾಬ್ದಾರಿ ಸ್ಥಾನದಲ್ಲಿದ್ದು, ಮಕ್ಕಳ ಬೆಳವಣಿಗೆಗೆ ಪೂರಕ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.
‘ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ಮುಂದುವರಿಯಬೇಕು. ಜಿಲ್ಲೆಯಲ್ಲೂ ಸರ್ಕಾರಿ ಶಾಲೆಗಳ ಉಳಿವಿಗಾಗಿ ಅಧಿಕಾರಿಗಳು ವಿಶೇಷ ಪ್ರಯತ್ನ ಪಡುತ್ತಿದ್ದು, ಸಾರ್ವಜನಿಕರೂ ಅವರೊಂದಿಗೆ ಸಹಕಾರ ನೀಡಬೇಕು’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.