ಮೈಸೂರು: ‘ಕಡಿಮೆ ಪ್ರಮಾಣದ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಚಟುವಟಿಕೆಗಳನ್ನು ಹೆಚ್ಚಾಗಿ ನಡೆಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.
ಇಲ್ಲಿ ಮಂಗಳವಾರ ನಡೆದ ಚುನಾವಣಾ ಪೂರ್ವ ಸಿದ್ಧತೆ ಹಾಗೂ ಸ್ವೀಪ್ ಚಟುವಟಿಕೆಗಳ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಆದ್ಯತೆ ನೀಡಬೇಕು. ಮತದಾರರ ಅಂತಿಮ ಪಟ್ಟಿ ಪ್ರಕಟವಾಗಿದ್ದು, ಹೆಸರು ಇದೆಯೇ, ಇಲ್ಲವೇ ಎನ್ನುವುದನ್ನು ಎಲ್ಲರೂ ಖಚಿತಪಡಿಸಿಕೊಳ್ಳಬೇಕು. ಮತಗಟ್ಟೆಯ ವಿವರ ದೊರೆಯಬೇಕು. ಇದಕ್ಕಾಗಿ ಸುಲಭವಾಗಿ ಸಾರ್ವಜನಿಕರು ತಮ್ಮ ಬೂತ್ ವ್ಯಾಪ್ತಿಯಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬುದರ ಮಾಹಿತಿ ನೀಡಬೇಕು’ ಎಂದರು.
‘ಎಲ್ಲ ಇಲಾಖೆಯವರೂ ತಮ್ಮ ವ್ಯಾಪ್ತಿಯಲ್ಲಿ ಯಾವ ರೀತಿ ಸ್ವೀಪ್ ಚಟುವಟಿಕೆಗಳನ್ನು ನಡೆಸಬೇಕು ಎಂಬ ಬಗ್ಗೆ ಯೋಜನೆ ಸಿದ್ಧಪಡಿಸಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಮೂಲಸೌಲಭ್ಯ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ದೈಹಿಕ ನ್ಯೂನತೆಯುಳ್ಳವರು, ಮಹಿಳೆಯರು ಹಾಗೂ ಜನರನ್ನು ಆಕರ್ಷಿಸಲು ವಿನೂತನ ಮತಗಟ್ಟೆ ಸ್ಥಾಪನೆಗೆ ಈಗಿನಿಂದಲೇ ಕಾರ್ಯಕ್ರಮ ರೂಪಿಸಬೇಕು’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಚುನಾವಣಾ ತಹಶೀಲ್ದಾರ್ ರಾಮಪ್ರಸಾದ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.