ಮೈಸೂರು: ‘ಜಿಲ್ಲೆಯಲ್ಲಿ ಭೌಗೋಳಿಕ ಮಹತ್ವ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದಎಲೆ, ಮೈಸೂರು ಸಿಲ್ಕ್ ಸೀರೆ ಸೇರಿದಂತೆ ಇನ್ನಿತರೆ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡಿ’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕೈಗಾರಿಕೆಗಳಿಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕೆಗಳ ಕುಂದುಕೊರತೆ ಸಭೆ ಹಾಗೂ ರಫ್ತು ಉತ್ತೇಜನ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ‘ಮೈಸೂರಿನಿಂದ ಹೆಚ್ಚು ರಫ್ತು ಮಾಡುವ ಬಗ್ಗೆ ಯೋಜನೆ ರೂಪಿಸಿ, ವರದಿ ತಯಾರಿಸಿ ಡಿಸೆಂಬರ್ ಅಂತ್ಯದ ಒಳಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ತಿಳಿಸಿದರು.
ಕೈಗಾರಿಕಾಭಿವೃದ್ಧಿ ವಲಯಗಳಲ್ಲಿ ಕೆಲವು ನಿವೇಶನಗಳಿಗೆ ಅಧಿಕ ಬೆಲೆ ನಿಗದಿಪಡಿಸಲಾಗಿದೆ. ಅದನ್ನು ಸರಿಪಡಿಸಬೇಕು ಎಂದು ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸುವಂತೆ ರೋಹಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಕೈಗಾರಿಕೋದ್ಯಮಿಗಳ ಕುಂದು–ಕೊರತೆ ಆಲಿಸುವ ಸಭೆಯನ್ನು ಪ್ರತಿ ತಿಂಗಳು ಡಿಐಸಿಯ ಜಂಟಿ ನಿರ್ದೇಶಕರೇ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.