ಎಚ್.ಡಿ.ಕೋಟೆ: ರೈತರ ದಿನ ಮತ್ತು ರೈತರ ಹುತಾತ್ಮ ದಿನವನ್ನು ಸರ್ಕಾರದಿಂದಲೇ ಮಾಡುವ ಕುರಿತು ಕೃಷಿ ಸಚಿವರ ಜೊತೆ ಮಾತನಾಡಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಕ್ರಾಂತಿಕಾರಿ ಕಿಶನ್ ಸೇನೆ ಆಯೋಜಿಸಿದ್ದ 45ನೇ ವರ್ಷದ ರೈತರ ಹುತಾತ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ನಾನೂ ಸಹ ಕೃಷಿ ಕುಟುಂಬದಿಂದ ಬಂದಿದ್ದೇನೆ. ನನ್ನ ತಂದೆಯವರು ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದರು. ಅವರಂತೆ ರೈತರಿಗೆ ಪೂರಕವಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.
ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ವರ್ಷದ ಬಜೆಟ್ನಲ್ಲೆ ₹52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಸರಗೂರು ಭಾಗದಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಮುಳ್ಳೂರು ಪಡುಕೋಟೆ ಚೆಕ್ಕೋಡ್ನಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಉಪಘಟಕ ತೆರೆಯಲಾಗುತ್ತದೆ. ತಾಲ್ಲೂಕಿನಲ್ಲಿ 220 ವಿದ್ಯುತ್ ಘಟಕ ಸ್ಥಾವರ ಸ್ಥಾಪಿಸಲು 80 ಎಕರೆ ಜಮೀನಿನ ಅವಶ್ಯಕತೆ ಇದೆ ಎಂದರು.
ಗದ್ದಿಗೆ ವೃತ್ತದ ಬಳಿ ಭಾರತೀಯ ಕ್ರಾಂತಿಕಾರಿ ಕಿಶನ್ ಸೇನೆಯು ರೈತರ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ, ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕೇಂದ್ರ ಉದ್ಘಾಟಿಸಲಾಯಿತು.
ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ತಾಲ್ಲೂಕು ಅಧ್ಯಕ್ಷ ಬೂದನೂರು ಮಹದೇವ, ರಾಜ್ಯ ಯುವ ಘಟಕ ಅಧ್ಯಕ್ಷ ರಫಿಉಲ್ಲಾ, ಜಿಲ್ಲಾಧ್ಯಕ್ಷ ಗಂಗಾಧರ್, ಶಶಿಕುಮಾರ್, ಗೋವಿಂದ್ ರಾಜ್, ಯಶೋಧಾ, ಈವನ್ ರಾಜ್, ತಸ್ಲೀಮ್, ವೆಂಕಟಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.